ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್‌.ಅಶೋಕ 

6 months ago

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ ಬಗ್ಗೆ ನಗರದ ಜನರಿಗೆ ಯಾವುದೇ ಮಾಹಿತಿ ನೀಡಿಲ್ಲ. ನಾನು ಅಧಿಕಾರಿಗಳನ್ನು ಈ ಬಗ್ಗೆ ಕೇಳಿದಾಗ 124 ಇಲಾಖೆಗಳಿಂದ ಅನುಮತಿ ಪಡೆಯಬೇಕಿದೆ ಎಂದು ತಿಳಿದುಬಂತು. ನನ್ನನ್ನೇ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆಂದು ಹೇಳಿದ್ದಾರೆ. ಇಂತಹ ಯೋಜನೆ ಮಾಡಲು ಇವರಿಗೆ ನೈಪುಣ್ಯತೆ ಇದೆಯೇ ಎಂದು ಸಾಬೀತುಪಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಸ್ತೆಗುಂಡಿಗಳನ್ನು ಮುಚ್ಚಿಸಲಿ. ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ? ಇದಕ್ಕೆ ಹಣ ಎಲ್ಲಿದೆ? ಎಂದು ಪ್ರಶ್ನಿಸಿದರು.

ಬಿಜೆಪಿಯವರು ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಮೊದಲು ರಸ್ತೆಗುಂಡಿ ಮುಚ್ಚಿಸಲಿ, ಕಸ ನಿರ್ವಹಣೆ ಮಾಡಲಿ. ಯೋಜನೆ ಖಂಡಿತ ಮಾಡುತ್ತೇವೆ ಎಂದು ದೌರ್ಜನ್ಯದಂತೆ ಮಾತನಾಡಬಾರದು. ಲಾಲ್‌ಬಾಗ್‌, ಕೆಂಪೇಗೌಡ ಗೋಪುರ ಹಾಳು ಮಾಡಬಾರದು. ಪರಿಸರ ನಾಶ ಮಾಡಬಾರದು. ನನಗೆ ಉತ್ತರ ಕೊಡುವ ಬದಲು ಜನರಿಗೆ ಸರ್ಕಾರ ಉತ್ತರ ನೀಡಬೇಕು. ನಾನಿಲ್ಲಿ ಜನರ ಧ್ವನಿಯಾಗಿ ಮಾತಾಡುತ್ತಿದ್ದೇನೆ ಎಂದರು.

ನವೆಂಬರ್‌ ಕ್ರಾಂತಿಯ ಬಗ್ಗೆ ಮಾಜಿ ಸಚಿವ ರಾಜಣ್ಣ ಹೇಳಿದ್ದರು. ರಾಮನಗರ, ದಾವಣಗೆರೆ ಶಾಸಕರು ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಅವರ ಶಾಸಕರೇ ಹೇಳಿದ್ದಾರೆ. ಬಿಜೆಪಿಯವರು ಅಭಿವೃದ್ಧಿಗಾಗಿ ಆಗ್ರಹಿಸುತ್ತಿದ್ದಾರೆ. ಯಾರೇ ಸಿಎಂ ಆದರೂ ಜನತೆಗೆ ಒಳಿತು ಮಾಡಬೇಕೆಂದು ಒತ್ತಾಯಿಸುತ್ತೇವೆ. ಕ್ರಾಂತಿ ಹಾಗೂ ಭ್ರಾಂತಿ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕರೇ ಇಂತಹ ಮಾತಾಡುತ್ತಿದ್ದಾರೆ ಎಂದರು.

Leave a Reply