ಬಿಐಟಿಎಂ ಕಾಲೇಜಿನಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ

1 year ago

ಲಂಚದ ಬೇಡಿಕೆಯಿಟ್ಟರೆ ದೂರು ಸಲ್ಲಿಸಿ: ಲೋಕಾಯುಕ್ತ ಎಸ್‌ಪಿ ಸಿದ್ದರಾಜು.ಸಿ

ಬಳ್ಳಾರಿ: ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ, ನೌಕರರು ನಿಮ್ಮ ನ್ಯಾಯಯುತವಾದ ಕೆಲಸವನ್ನು ಮಾಡಿಕೊಡಲು ಲಂಚದ ಹಣಕ್ಕಾಗಿ ಒತ್ತಾಯಿಸಿದರೆ ಲೋಕಾಯುಕ್ತ ಕಚೇರಿಗೆ ದೂರು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಸಿದ್ದರಾಜು.ಸಿ  ಹೇಳಿದರು.

ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಕಚೇರಿ, ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಬಿಐಟಿಎಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ಕೆಲಸಗಳಿಗಾಗಿ ಸಲ್ಲಿಸಿದ ಅರ್ಜಿಗಳಿಗೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡಿದರೆ, ಕಿರುಕುಳ ನೀಡಿದರೂ ದೂರು ಹೇಳಬಹುದು ಎಂದರು.

ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕ ಹುದ್ದೆಯನ್ನು ಬಳಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಲ್ಲಿ ಅಥವಾ ಹುದ್ದೆಯ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ಮಾಡುತ್ತಿರುವುದು ಕಂಡುಬಂದಲ್ಲಿ, ನಿಯಮಬಾಹಿರ ಆದೇಶ ಅಥವಾ ಕಾರ್ಯ ನಡೆಯುತ್ತಿದ್ದಲ್ಲಿ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ಕಚೇರಿ ಅಥವಾ ಮೊ.9364062511, 9364062630 ಗೆ ಸಂಪರ್ಕಿಸಬಹುದು ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಡೆಪ್ಯೂಟಿ ಸೂಪರಿಂಟೆಂಡೆಕಟ್ ಆಫ್ ಪೊಲೀಸ್ ಆರ್.ವಸಂತ್‌ಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಮೊಹಮ್ಮದ್ ರಫಿ, ಸಂಗಮೇಶ್, ಬಿಐಟಿಎಂ ಕಾಲೇಜಿನ ಪ್ರಾಚಾರ್ಯ ಡಾ.ಯಡವಳ್ಳಿ ಬಸವರಾಜ್, ಡೀನ್ (ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ) ಡಾ.ವಿ.ಸಿ.ಪಾಟೀಲ್, ಚೈತನ್ಯರೆಡ್ಡಿ, ಬಿಐಟಿಎಂ ರಾಷ್ಟ್ರೀಯ ಸೇವಾ ಯೋಜನೆಯ ಇನ್‌ಚಾರ್ಜ್ ಡಾ.ಶೇಕ್‌ಮೀರ.ಡಿ, ಸಹಪ್ರಾಧ್ಯಾಪಕ ಗುರುರಾಜ್, ಯೋಗಾನಂದ ಪತ್ತಾರ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಹಾಜರಿದ್ದರು.

Leave a Reply