ಮಂಗಳೂರು: ತ್ರಿಪುರ ರಾಜ್ಯದೆಲ್ಲೆಡೆ CPIM ಕಚೇರಿಗಳ ಮೇಲೆ ನಡೆದ ಸರಣಿ ದಾಳಿ ಖಂಡಿಸಿ CPIM ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು.
ನೆರೆದಿದ್ದ ಪ್ರತಿಭಟನಾಕಾರರು, ತ್ರಿಪುರಾದಲ್ಲಿ ಬಿಜೆಪಿ ತಾಲಿಬಾನ್ ಮಾದರಿಯ ಗೂಂಡಾಗಿರಿ, ಪೈಶಾಚಿಕ ಕೃತ್ಯ ನಡೆಸುತ್ತಿದೆ ಎಂದು ಆರೋಪಿಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ CPIM ಕಾರ್ಯಕರ್ತರು ಬಿಜೆಪಿ ಗೂಂಡಾಗಿರಿ ಹಾಗೂ ಭಯೋತ್ಪಾದನಾ ಕೃತ್ಯ ನಡೆಸುತ್ತಿದೆ ಎಂದು ಆರೋಪಿಸಿದರು. ಜೊತೆಗೆ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ, ತ್ರಿಪುರ ರಾಜ್ಯದಲ್ಲಿ 40 ವರ್ಷಗಳ ಕಾಲ ಸುದೀರ್ಘವಾಗಿ ಆಳ್ವಿಕೆ ನಡೆಸಿದ ಕಮ್ಯುನಿಸ್ಟರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದರು. ಮಾತ್ರವಲ್ಲದೆ ಪ್ರತ್ಯೇಕ ರಾಜ್ಯದ ಬೇಡಿಕೆಯಿಟ್ಟ ಅಲ್ಲಿನ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ದ ಪ್ರಬಲವಾಗಿ ಸೆಣಸಾಟ ನಡೆಸಿ ರಾಜ್ಯದಲ್ಲಿ ಐಕ್ಯತೆ ಸಾಧಿಸಿ, ತ್ರಿಪುರವನ್ನು ಭಾರತದ ಅವಿಭಾಜ್ಯ ಅಂಗವಾಗಿಸುವಲ್ಲಿ ಅಲ್ಲಿನ ಕಮ್ಯುನಿಸ್ಟ್ ಚಳುವಳಿಯ ಪಾತ್ರ ಪ್ರಧಾನವಾಗಿದೆ ಎಂದರು.
ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಣಬಲ, ತೋಳ್ಬಲ ಬಳಸಿ, ಕುತಂತ್ರದಿಂದ ಆಧಿಕಾರಕ್ಕೇರಿದ ಬಿಜೆಪಿ, ತನ್ನ ಜನವಿರೋಧಿ ನೀತಿಗಳಿಂದಾಗಿ ಜನರ ಆಕ್ರೋಶಕ್ಕೆ ತುತ್ತಾಗಿದೆ. ಮಾತ್ರವಲ್ಲದೆ ತನ್ನ ಭಯೋತ್ಪಾದನಾ ಕೃತ್ಯದಿಂದ ಜನತೆಯಲ್ಲಿ ಭಯಭೀತಿ ಸೃಷ್ಠಿಸಿದೆ. ಇದರ ವಿರುದ್ದ ಪ್ರಬಲ ಜನಚಳುವಳಿಯನ್ನು ಸಂಘಟಿಸಿದ ಕಮ್ಯುನಿಸ್ಟರ ವಿರುದ್ದ ಸರಣಿ ದಾಳಿ ಸಂಘಟಿಸುವ ಮೂಲಕ ತನ್ನ ಹತಾಶ ಪ್ರವೃತ್ತಿ ಪ್ರದರ್ಶಿಸಿದೆ ಎಂದು ಟೀಕಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ದೇಶಪ್ರೇಮದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ BJP ತ್ರಿಪುರದಲ್ಲಿ ದೇಶದ್ರೋಹಿಗಳೊಂದಿಗೆ ಒಪ್ಪಂದ ಮಾಡಿ ಕಳೆದ ಚುನಾವಣೆಯಲ್ಲಿ ಗೆದ್ದು ರಾಜ್ಯದೆಲ್ಲೆಡೆ ದೊಂಬಿ ಗಲಭೆ ಸ್ರಷ್ಟಿಸಿ ಜನರ ಬದುಕನ್ನೇ ನರಕಯಾತನೆಯನ್ನಾಗಿಸಿದೆ. ತನ್ನ ತಾಲಿಬಾನ್ ಮಾದರಿಯ ಭಯೋತ್ಪಾದನಾ ಕೃತ್ಯದ ಮೂಲಕ ಕಮ್ಯುನಿಸ್ಟರ ಮೇಲೆ ದೈಹಿಕ ದಾಳಿ ನಡೆಸುವ ಬಿಜೆಪಿ ಸಂಘಪರಿವಾರದ ವಿರುದ್ದ ಭುಗಿಲೆದ್ದ ಆಕ್ರೋಶ ಜನಚಳುವಳಿಯಾಗಿ ಮಾರ್ಪಟ್ಟು ತ್ರಿಪುರ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸತೊಡಗಿದೆ ಎಂದರು.
CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿ ಮಾತನಾಡಿ, ಅಂದು ಕಾಂಗ್ರೆಸ್ ನಡೆಸಿದ ಅರೆ ಫ್ಯಾಸಿಸ್ಟ್ ದಬ್ಬಾಳಿಕೆಯನ್ನು ಎದುರಿಸಿಯೇ ತ್ರಿಪುರ ರಾಜ್ಯದಲ್ಲಿ ಕಮ್ಯುನಿಸ್ಟರು ಅಧಿಕಾರಕ್ಕೇರಿದ್ದು ಮಾತ್ರವಲ್ಲ 40 ವರ್ಷಗಳ ಕಾಲ ಸುಧೀರ್ಘವಾಗಿ ಉತ್ತಮ ಆಡಳಿತ ನೀಡುವ ಮೂಲಕ ದೇಶದಲ್ಲೇ ಮಾದರಿ ಸರಕಾರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಬಿಜೆಪಿ ಸಂಘಪರಿವಾರ ನಡೆಸುವ ಭಯೋತ್ಪಾದನಾ ಕೃತ್ಯದಿಂದ ಕಮ್ಯುನಿಸ್ಟರು ಯಾವತ್ತೂ ವಿಚಲಿತರಾಗುವುದಿಲ್ಲ. ಕಮ್ಯುನಿಸ್ಟರು ತನ್ನ ಕೊನೆಯ ಉಸಿರು ಇರುವವರೆಗೂ ದೇಶದ ಐಕ್ಯತೆ, ಸೌಹಾರ್ದತೆಗಾಗಿ ಹಾಗೂ ಜನರ ಬದುಕಿನ ರಕ್ಷಣೆಗಾಗಿ ಶ್ರಮಿಸುತ್ತಾರೆ ಎಂದರು.
ಪ್ರತಿಭಟನೆಯಲ್ಲಿ CPIM ದ.ಕ.ಜಿಲ್ಲಾ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ದಯಾನಂದ ಶೆಟ್ಟಿ, ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, CPIM ಮಂಗಳೂರು ನಗರ ಮುಖಂಡ ನವೀನ್ ಕೊಂಚಾಡಿ, ಬಶೀರ್ ಪಂಜಿಮೊಗರು, ಬಾಬು ದೇವಾಡಿಗ, ಅಶೋಕ್ ಶ್ರೀಯಾನ್, ದಿನೇಶ್ ಶೆಟ್ಟಿ, ಶಶಿಧರ್ ಶಕ್ತಿಗರ, ಶ್ರೀನಾಥ ಕಾಟಿಪಳ್ಳ ಮಹಿಳಾ ಮುಖಂಡರಾದ ಭಾರತಿ ಬೋಳಾರ, ನಳಿನಾಕ್ಷಿ, ವಿಲಾಸಿನಿ, ಪ್ರಮೀಳಾ ಶಕ್ತಿನಗರ, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ ಮುಂತಾದವರು ಭಾಗವಹಿಸಿದ್ದರು.



