ಬೆಂಗಳೂರು: ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣ ನೆಪವಾಗಿಸಿ ಕೋರ್ಟ್ ಮೂಲಕ ಅವರ ರಾಜಕೀಯ ಭವಿಷ್ಯ ಮುಗಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದರು.
ಕೋರ್ಟ್ ಆದೇಶದ ನೆಪದಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಬೆಂಗಳೂರಿನಲ್ಲಿ ಕೆಪಿಸಿಸಿ ವತಿಯಿಂದ ಮೌನ ಸತ್ಯಾಗ್ರಹ ನಡೆಸಲಾಯಿತು.
ನಗರದ ಫ್ರೀಡಂಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಮೌನ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಸಚಿವರಾದ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಸಚೇತಕ ಸಿ.ಎಂ.ಅಶೋಕ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪ್ರತಿಭಟನಾಕಾರರು “ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು, ಕುತಂತ್ರಿ ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು.



