ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 24*7 ಸನ್ನದ್ದರಾಗಿರುವಂತೆ ಹಾಗೂ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ಧತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಎಲ್ಲಾ ತಹಸೀಲ್ದಾರ್ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವಂತೆ ತಿಳಿಸಿದರು.
ಈ ಹಿಂದಿನ ಅವಧಿಯಲ್ಲಿ ಅರಗಾ, ಚೆಂಡಿಯಾ, ತೋಡೂರು, ಮುದಗಾ, ಬಿಣಗಾ ಪ್ರದೇಶಗಳಲ್ಲಿನ ಜನವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರಸ್ತುತ ಈ ಪ್ರದೇಶಗಳಲ್ಲಿ ಈ ಬಾರಿ ಹಿಂದಿನಂತೆ ಯಾವುದೇ ಸಮಸ್ಯೆಯಾಗದಂತೆ ಕೈಗೊಂಡಿರುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಮುಕ್ತಾಯಗೊಳಿಸಿ ವರದಿ ನೀಡುವಂತೆ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಈ ತಿಂಗಳೊಳಗೆ ಮುಕ್ತಾಯಗೊಳಿಸುವಂತೆ ಹಾಗೂ ರಸ್ತೆಗಳ ಪಕ್ಕದಲ್ಲಿ ಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಹಾಗೂ ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರವಹಿಸಬೇಕು ಎಂದರು.
ಶಿರಸಿ-ಕುಮಟಾ ರಸ್ತೆಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಮೇ ಅಂತ್ಯದೊಳಗೆ ಸಂಪೂರ್ಣ ಮುಕ್ತಾಯಗೊಳಿಸಬೇಕು ಈಗಾಗಲೇ ಗುರುತಿಸಲಾಗಿರುವ ಗುಡ್ಡ ಕುಸಿತ ಪ್ರದೇಶದಲ್ಲಿ ಸ್ಪಾರ್ಸ್ಗಳನ್ನು ನೇಮಕ ಮಾಡಿ ನಿರಂತರವಾಗಿ ನಿಗಾ ವಹಿಸಬೇಕು. ಹೆದ್ದಾರಿಯಲ್ಲಿ ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಶಾಲೆ, ಅಂಗನವಾಡಿ, ಕಾಲೇಜುಗಳ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕುರಿತಂತೆ ಮತ್ತು ಶಿಥಿಲ ಕಟ್ಟಡಗಳಿದ್ದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಸುರಕ್ಷತೆ ಕುರಿತಂತೆ ಆಡಿಟ್ ನಡೆಸಬೇಕು ಎಂದರು.
ಈ ಪ್ರದೇಶಗಳಲ್ಲಿ ಯಾವುದೇ ಅವಘಢಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಹಳ್ಳ, ಕಾಲುಸಂಕ ಸೇರಿದಂತೆ ಅಪಾಯಕಾರಿ ಪ್ರದೇಶಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಅವರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ಕಡಿತವಾದಲ್ಲಿ ತುರ್ತು ಮರು ಸಂಪರ್ಕಕ್ಕೆ ಅಗತ್ಯವಿರುವ ಉಪಕರಣಗಳು, ವಾಹನಗಳು ಮತ್ತು ಸಿಬ್ಬಂದಿಯನ್ನು ಸಿದ್ದವಾಗಿಟ್ಟುಕೊಂಡಿರಬೇಕು ಲೋಕೋಪಯೋಗಿ, ಪಂಚಾಯತ್ ರಾಜ್ ಸೇರಿದಂತೆ ಕಾಮಗಾರಿಗಳನ್ನು ನಿರ್ವಹಿಸುವ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವವರ ಬಳಿ ಇರುವ ವಾಹನಗಳು ಮತ್ತು ಯಂತ್ರೋಪಕರಣಗಳು ಮತ್ತು ಅವರ ಸಂಪರ್ಕ ಸಂಖ್ಯೆ ಕುರಿತ ವಿವರವಾದ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳುವ ಜೊತೆಗೆ ಅದರ ಪ್ರತಿಯನ್ನು ಜಿಲ್ಲಾ ಕಂಟ್ರೋಲ್ ರೂಂ ಗೆ ನೀಡಿ, ತುರ್ತು ಸಂದರ್ಭದಲ್ಲಿ ಈ ಎಲ್ಲಾ ರಕ್ಷಣಾ ಸಂಪನ್ಮೂಲಗಳು ನೆರವಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು, ಅಗತ್ಯ ಔಷಧಗಳ ಕೊರತೆಯಾಗಬಾರದು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಲಭ್ಯವಿರಬೇಕು, ವೈದ್ಯಕೀಯ ಉಪಕರಣಗಳು ಹಾಗೂ ಆಂಬುಲೆನ್ಸ್ ಗಳು ಸುಸ್ಥಿತಿಯಲ್ಲಿರುವಂತೆ ಎಚ್ಚರವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂದಾಯ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಕಚ್ಚಾ ಮನೆಗಳ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಅತೀ ಹೆಚ್ಚು ಮಳೆ ಬೀಳುವ ಮುನ್ಸೂಚನೆ ದೊರೆತ ಕೂಡಲೇ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವ ಕುರಿತಂತೆ ನೋಟಿಸ್ ನೀಡಿ, ತಕ್ಷಣ ಅವರನ್ನು ಅಲ್ಲಿಂದ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು, ಅಪಾಯಕಾರಿ ಜಾಹೀರಾತು ಫಲಕಗಳಿದ್ದಲ್ಲಿ ಅವುಗಳನ್ನು ತೆರವುಗಳಿಸಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಅಗ್ನಿಶಾಮಕ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಸುರಕ್ಷತಾ ಪರಿಕರಗಳು ಲಭ್ಯವಿರುವಂತೆ ಎಚ್ಚರವಹಿಸಬೇಕು, ಮುಂಗಾರು ಸಮರ್ಪಕ ನಿರ್ವಹಣೆ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮಾನ್ಸೂನ್ ಅವಧಿಯಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ಈ ಅವಧಿಯಲ್ಲಿ ಯಾವುದೇ ರೀತಿಯ ರಜೆಯನ್ನು ಪಡೆಯವಂತಿಲ್ಲ, ತುರ್ತು ಸಂದರ್ಭಗಳಿದ್ದಲ್ಲಿ ರಜೆ ಪಡೆಯುವಾಗ ತಮ್ಮ ಸ್ಥಾನಕ್ಕೆ ಜವಾಬ್ದಾರಿಯುತ ಮತ್ತೊಬ್ಬ ಅಧಿಕಾರಿಯನ್ನು ನಿಯೋಜಿಸಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಸಹಕಾರದಿಂದ ಒಟ್ಟಾಗಿ ಕಾರ್ಯನಿರ್ವಹಿಸುವುದರ ಮೂಲಕ ಜಿಲ್ಲೆಯಲ್ಲಿ ಮಾನ್ಸೂನ್ ವೇಳೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ನೆರವು ಒದಗಿಸಬೇಕು ಎಂದರು.
ಸೀ ಬರ್ಡ್ ಮತ್ತು ನೌಕಾನೆಲೆ ವತಿಯಿಂದ ಈ ಪ್ರದೇಶಗಳಲ್ಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಈಗಾಗಲೇ ಕೈಗೊಂಡಿರುವ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಮುಕ್ತಾಯಗೊಳಿಸಲಾಗಿದ್ದು, ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಗಿದೆ ಎಂದು ಸೀ ಬರ್ಡ್ ಯೋಜನೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್ಗಳು, ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.




