ಬೆಂಗಳೂರು: ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನ ಮುಂದಿನ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ರೈತರಿಗೆ ನೀರು ನೀಡಬೇಕೆಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕಾಮಗಾರಿಗೆ ವೇಗ ನೀಡುವ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಆ ಭಾಗದ ಶಾಸಕರ ಹಾಗೂ ಸಂಸದರ ಸಭೆಯನ್ನ ಅತಿ ಶೀಘ್ರದಲ್ಲಿ ಕರೆಯುವುದಾಗಿ ತಿಳಿಸಿದರು.
ಇದಾದ ನಂತರ ದೆಹಲಿಯಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ನಾರಾಯಣಸ್ವಾಮಿ ಅವರ ಜೊತೆ ನಡೆಸುವುದಾಗಿ ಹೇಳಿದರು.
ಈ ತಿಂಗಳ 18ರಿಂದ ಲೋಕಸಭೆ ಅಧಿವೇಶನ ನಡೆಯಲಿದ್ದು ಆ ಸಮಯದಲ್ಲಿ ತಾವು ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ಯೋಜನೆಗೆ ಇರುವ ತೊಡಕುಗಳನ್ನ ನಿವಾರಿಸಿ ಹಣ ನೀಡುವಂತೆ ಒತ್ತಾಯಿಸುವುದಾಗಿ ತಿಳಿಸಿದರು.
21,473 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5300 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು, ಕೇಂದ್ರ ಜಲಶಕ್ತಿ ಹಾಗೂ ಕೇಂದ್ರ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ವಾರ ಸಭೆ ನಡೆಸಿದ್ದಾರೆ ಎಂದು ಇದೇ ವೇಳೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ತಿಳಿಸಿದರು.
ಈ ಯೋಜನೆಗೆ ರಾಜ್ಯ ಸರ್ಕಾರ ಕಳೆದ ಬಜೆಟ್ ನಲ್ಲಿ 2500 ಕೋಟಿ ರೂಪಾಯಿ ತೆಗೆದಿರಿಸಿದೆ. ತಕ್ಷಣವೇ ರಾಜ್ಯ ಸರ್ಕಾರ 500 ಕೋಟಿ ರೂಪಾಯಿಗಳು ನೀಡಲು ಸಿದ್ಧವಿದ್ದು, ಕೇಂದ್ರ ಸರ್ಕಾರ ಕನಿಷ್ಠ 2000 ಕೋಟಿ ರೂಪಾಯಿಗಳನ್ನು ನೀಡುವಂತೆ ಸಹ ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ ಎಂದು ಮಾಹಿತಿ ನೀಡಿದರು.
ತರೀಕೆರೆ, ಕಡೂರು ಹಾಗು ಅಜ್ಜಂಪುರದಲ್ಲಿ 220ಕ್ಕೂ ಹೆಚ್ಚು ರೈತರು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಹಣವನ್ನು ಪರಿಹಾರ ಕೋರಿ ಚಿಕ್ಕಮಂಗಳೂರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಮೊಕದ್ದಮೆಗಳನ್ನು ಆದಷ್ಟು ಶೀಘ್ರವಾಗಿ ಇತ್ಯರ್ಥಪಡಿಸಿದರೆ ಯೋಜನೆಗೆ ವೇಗ ಸಿಗಲಿದೆ ಎಂದು ತಿಳಿಸಿದರು.
ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಮಾತನಾಡಿ, ಈ ಎಲ್ಲಾ ಮೊಕದ್ದಮೆಗಳನ್ನು ಲೋಕ ಅದಾಲತ್ ನಲ್ಲಿ ಮಂಡಿಸಿ ರೈತರಿಗೆ ಅಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ.ಈ ನಿಟ್ಟಿನಲ್ಲಿ ಆ ಭಾಗದ ಜನಪ್ರತಿನಿಧಿಗಳ ಸಭೆಯನ್ನು ಕರೆಯುವಂತೆ ಸಲಹೆ ನೀಡಿದರು.
ತರೀಕೆರೆ ಕಡೂರು ಚಿಕ್ಕನಾಯಕನಹಳ್ಳಿ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಕಾಮಗಾರಿಗೆ ಚಾಲನೆ ನೀಡಿದರೆ ಮುಂದಿನ ಒಂದೆರಡು ವರ್ಷಗಳಲ್ಲಿ ನೀರು ತರಬಹುದು ಎಂದು ಇದೆ ವೇಳೆ ಜಯಚಂದ್ರ ತಿಳಿಸಿದರು.




