ಬಿಜೆಪಿಗೆ ಆಘಾತ: ಶೃಂಗೇರಿಯಲ್ಲಿ ಮತ್ತೆ ಟಿ.ಡಿ. ರಾಜೇಗೌಡರೇ ಶಾಸಕ!

4 weeks ago

ಮರು ಮತ ಎಣಿಕೆ ರದ್ದು ಮಾಡಿದ ಸುಪ್ರೀಂ ಕೋರ್ಟ್‌

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಮಹತ್ವದ ತಿರುವಿನಲ್ಲಿ ಸುಪ್ರೀಂ ಕೋರ್ಟ್‌ ಅಂಚೆ ಮತಗಳ ಮರು ಎಣಿಕೆಯನ್ನು ರದ್ದುಗೊಳಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಈ ತೀರ್ಪಿನಿಂದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ದೊಡ್ಡ ರಿಲೀಫ್‌ ಸಿಕ್ಕಿದ್ದು, ಅವರು ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಬಳಿಕ ಚುನಾವಣಾ ಅಕ್ರಮಗಳ ಆರೋಪ ಮಾಡಿದ್ದ ಜೀವರಾಜ್, ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಆದೇಶದಂತೆ ಇತ್ತೀಚೆಗೆ ಅಂಚೆ ಮತಗಳ ಮರು ಎಣಿಕೆ ನಡೆದಿತ್ತು.


ಮೇ 2ರಂದು ನಡೆದ ಮರು ಎಣಿಕೆಯಲ್ಲಿ ಡಿ.ಎನ್. ಜೀವರಾಜ್ ಅವರಿಗೆ ಅನುಕೂಲಕರ ಫಲಿತಾಂಶ ಬಂದ ಹಿನ್ನೆಲೆ ಚುನಾವಣಾ ಆಯೋಗ ಅವರನ್ನು ಶಾಸಕರಾಗಿ ಘೋಷಿಸಿತ್ತು. ಇದನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಸೋಮವಾರ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, ಹೈಕೋರ್ಟ್ ಸೂಚನೆಯಡಿ ನಡೆದ ಮರು ಎಣಿಕೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.
ಇದರಿಂದ ಶೃಂಗೇರಿ ಕ್ಷೇತ್ರದಲ್ಲಿ ಮತ್ತೆ ರಾಜಕೀಯ ಚರ್ಚೆಗಳು ಜೋರಾಗಿದ್ದು, ಕಾಂಗ್ರೆಸ್ ಶಿಬಿರದಲ್ಲಿ ಸಂಭ್ರಮ ಮನೆ ಮಾಡಿದೆ.

Leave a Reply