ಕರ್ನಾಟಕದಲ್ಲಿ ಅತಿ ದೊಡ್ಡ “ಚುನಾವಣ ಕಳ್ಳತನ’ ನಡೆದಿದೆ: ರಾಹುಲ್ ಗಾಂಧಿ

9 months ago

ಬೆಂಗಳೂರು: ಸಾರ್ವತ್ರಿಕ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರ ಕುರಿತಂತೆ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.

ಕರ್ನಾಟಕದಲ್ಲಿ ಅತಿ ದೊಡ್ಡ “ಚುನಾವಣ ಕಳ್ಳತನ’ ನಡೆದಿದೆ. ಅದರ ವಿವರವನ್ನು ಶೀಘ್ರವೇ ಜನರ ಮುಂದೆ, ಚುನಾವಣ ಆಯೋಗದ ಮುಂದೆ ಸಾಕ್ಷಿ ಸಮೇತ ಬಹಿರಂಗ ಪಡಿಸುತ್ತೇವೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಭಾರತದಲ್ಲಿ ಚುನಾವಣೆಗಳ ಕಳ್ಳತನ ನಡೆಯುತ್ತಿರುವುದು ಸತ್ಯ. ಮಹಾರಾಷ್ಟ್ರದಲ್ಲಿ ಹೇಗೆ ಮ್ಯಾಚ್‌ ಫಿಕ್ಸಿಂಗ್‌ ನಡೆದಿತ್ತು ಎನ್ನುವ ಬಗ್ಗೆ ನಾವು ಎಲ್ಲರಿಗೂ ತೋರ್ಪಡಿಸಿದ್ದೆವು. ಅದೇ ರೀತಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲೂ ನಾವು ತನಿಖೆ ನಡೆಸಿದ್ದೇವೆ. ಅಲ್ಲಿ ದೊಡ್ಡ ಮಟ್ಟದಲ್ಲಿ ಮತಗಳ ಕಳ್ಳತನ ನಡೆದಿರುವುದು ಕಂಡುಬಂದಿದೆ. ಈ ಬಗ್ಗೆ ಶೀಘ್ರವೇ ಜನತೆಯ ಮುಂದೆ ಸಾಕ್ಷಿ ಸಮೇತ ಮಾಹಿತಿ ನೀಡಲಿದ್ದೇವೆ ಎಂದಿದ್ದಾರೆ.

ಈ ಹೇಳಿಕೆ ಕರ್ನಾಟಕದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ. ಅಲ್ಲದೆ, ಆ ಕ್ಷೇತ್ರ ಯಾವುದು ಎಂಬುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ 8 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 2 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದರೆ, 17 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಪೈಕಿ ಬೆಳಗಾವಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು, ಉಡುಪಿ -ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು – ಕೊಡಗು, ಚಿಕ್ಕಮಗಳೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ದೊಡ್ಡ ಪ್ರಮಾಣದ ಅಂತರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆಲುವು ಸಾಧಿಸಿದೆ. ಹಾಗಾದರೆ ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧ್ಯಯನ ನಡೆಸಿತ್ತು? ಎಂಬುವುದು ಇನ್ನಷ್ಟೇ ಬಹಿರಂಗವಾಗಬೇಕಾಗಿದೆ.

ಇದರ ನಡುವೆ ರಾಹುಲ್ ಗಾಂಧಿ ಅವರ ಹೇಳಿಕೆಯ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂತಹ ಅಕ್ರಮ ತಮ್ಮ ಸಹೋದರ ಸ್ಪರ್ಧಿಸಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇಂತಹ ಕಾಮಗಾರಿ ನಡೆದಿದೆ. ಈ ಬಗ್ಗೆ ತಮ್ಮ ಬಳಿ ಎಲ್ಲಾ ದಾಖಲೆಗಳು ಇವೆ ಎಂದಿದ್ದಾರೆ.

ಈ ಅಕ್ರಮದ ಬಗ್ಗೆ ಸೂಕ್ತ ಸಮಯದಲ್ಲಿ ಮಾಹಿತಿ ನೀಡಲಾಗುವುದು. ಅಕ್ರಮ ನಡೆದಿರುವ ಕುರಿತಂತೆ ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಸಂಪೂರ್ಣ ಸತ್ಯ ಎಂದರು.

ಮತ್ತೊಂದೆಡೆ ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿರುವ ಕ್ಷೇತ್ರ ಬೆಂಗಳೂರು ಕೇಂದ್ರ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಿ ಸಿ ಮೋಹನ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ಸ್ಪರ್ಧೆ ಮಾಡಿದ್ದರು. ಪಿ ಸಿ ಮೋಹನ್ 32,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೆ ಈ ಲೋಕಸಭಾ ಕ್ಷೇತ್ರದ ಶಿವಾಜಿನಗರದಲ್ಲಿ ಮತಗಳನ್ನು ಉದ್ದೇಶಪೂರ್ವಕವಾಗಿ ಡಿಲೀಟ್ ಮಾಡಲಾಗಿದೆ ಎಂಬ ಆರೋಪ ಇತ್ತು. ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೇ ಲೋಕಸಭಾ ಕ್ಷೇತ್ರದ ಮತ್ತೊಂದು ವಿಧಾನಸಭಾ ಕ್ಷೇತ್ರದ ಮಹದೇವಪುರದಲ್ಲೂ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಹಾಗಾಗಿ ರಾಹುಲ್ ಗಾಂಧಿ ಉಲ್ಲೇಖ ಮಾಡಿದ್ದು ಈ ಕ್ಷೇತ್ರವೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

Leave a Reply