ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆ ಅಧಿವೇಶನದಲ್ಲಿ ಮಂಡನೆ: ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧಪಟ್ಟಂತಹ ಮಸೂದೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರ ಪರವಾದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಮೊದಲು ವಾಣಿಜ್ಯ ಮಳಿಗೆಗಳು ಹಾಗೂ ಸಂಕೀರ್ಣಗಳ ಮುಂದೆ ಕನ್ನಡ ನಾಮಫಲಕ ಹಾಕುವ ಕುರಿತು ನಿರ್ಣಯ ಕೈಗೊಳ್ಳಲಾಯಿತು ಎಂದು ಹೇಳಿದರು.

ಭಾಷಾ ಬಳಕೆ, ಸರ್ಕಾರಿ ಕಡತದಲ್ಲಿ ಕನ್ನಡದ ಬಳಕೆ, ಧ್ವಜ ಬಳಕೆ ಕುರಿತಂತೆ ನಿರ್ಣಯ ಕೈಗೊಂಡಿದೆ. ಅದೇ ರೀತಿ ಉದ್ಯೋಗ ಸೃಷ್ಟಿಯಾಗುವ ಕಡೆ ಕನ್ನಡಿಗರಿಗೆ ನಿರ್ದಿಷ್ಟ ಪ್ರಮಾಣದ ಉದ್ಯೋಗಗಳನ್ನು ಮೀಸಲಿಡುವ ಕುರಿತಂತೆಯೂ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಬಯೋಕಾನ್‌ ಹಾಗೂ ಇನ್ಫೋಸಿಸ್‌‍ನಂತಹ ಸಂಸ್ಥೆಗಳ ಮುಖ್ಯಸ್ಥರು ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಂತ್ರಜ್ಞಾನ ಹಾಗೂ ತಾಂತ್ರಿಕತೆ ಆಧಾರಿತ ಉದ್ಯೋಗಗಳ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ. ವಿರೋಧ ಮಾಡುತ್ತಿರುವ ಬಹಳಷ್ಟು ಸಂಸ್ಥೆಗಳು ರಾಜ್ಯದಿಂದಲೇ ಬೆಳೆದಿವೆ. ಅಗತ್ಯ ಸಂದರ್ಭಗಳಲ್ಲಿ ಅವರಿಗೆ ಮಸೂದೆಯಿಂದ ವಿನಾಯಿತಿ ನೀಡಲಾಗುವುದು. ಆದರೆ ಇದರ ಕುರಿತಂತೆ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ ಎಂದರು.

ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದಾಗಿ ಯಾವ ಪ್ರಮಾಣದ ಮೀಸಲಾತಿ ಎಂದು ಸದ್ಯಕ್ಕೆ ತಾವು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

Leave a Reply