ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭ

1 year ago

ಮೈಸೂರು: ಡೀಸೆಲ್ ಹಾಲು, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಒಟ್ಟು 16 ದಿನಗಳ ಕಾಲ ರಾಜ್ಯದ ವಿವಿಧೆಡೆ ನಡೆಯಲಿರುವ ಜನಾಕ್ರೋಶ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮೈಸೂರಿನಲ್ಲಿ ಚಾಲನೆ ನೀಡಿದರು.

ನಾಡಿನ ಅಧಿದೇವತೆ ಚಾಮುಂಡಿಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜನರ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಬಳಲುತ್ತಿದ್ದರೆ, ಸರಕಾರ ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲದೆ ಇದ್ದರೂ ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದರು.

ಸರಕಾರ ಸಂವಿಧಾನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧ ನಡೆದುಕೊಂಡಂತಾಗಿದೆ. ದಲಿತರಿಗೆ ಮೀಸಲಿಟ್ಟ ಎಸ್ಇಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಸರಕಾರ ಹಾಗಿದ್ದರೆ ಕೇವಲ ದಲಿತರಿಗೆ ಮಾತ್ರ ಗ್ಯಾರಂಟಿಗಳನ್ನು ನೀಡುತ್ತಿದೆಯೇ ಎಂದು ಕೇಳಿದರು.

ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದು ಯಾತ್ರೆ ನಡೆಸಲಾಗುತ್ತಿದೆ. ರಾಜ್ಯಾಧ್ಯಕ್ಷರು, ವಿಪಕ್ಷದ ಇಬ್ಬರು ನಾಯಕರ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ. ಧರ್ಮಾಧಾರಿತ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆಗೂ ಚರ್ಚಿಸಿದ್ದೇವೆ. ಅದನ್ನು ಕೋರ್ಟಿನಲ್ಲಿ ಪ್ರಶ್ನಿಸುತ್ತೇವೆ ಎಂದರು.

Leave a Reply