ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶದವರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರು ಜೋಡಣೆ ಮಾಡುವ ಸಲುವಾಗಿ ನಡೆದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ರಾಮನಗರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಹೆಜ್ಜೆಹಾಕಿ, ನಂತರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಪುಣ್ಯಾತ್ಮ ಮಹಾತ್ಮ ಗಾಂಧಿಯನ್ನು ಗುಂಡಿಟ್ಟು ಕೊಲ್ಲುವಂಥಾದ್ದು ಏನಾಗಿತ್ತು? ಗಾಂಧಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದೇ ತಪ್ಪಾಯ್ತಾ? ಗಾಂಧಿ ಬ್ರಿಟಿಷರನ್ನು ವಿರೋಧಿಸಿದರು ಎನ್ನುವ ಕಾರಣಕ್ಕೆ ಗಾಂಧಿಯನ್ನು ಕೊಂದರೆ? ಎಂದು ಪ್ರಶ್ನಿಸಿದರು.
ಮೋದಿ ಅವರು ಪ್ರಧಾನಿ ಆದ ಬಳಿಕ ಭಾರತೀಯರ ಭಾವನೆಗಳನ್ನು ಕೆರಳಿಸಿ, ಭಾರತೀಯ ಸಮಾಜವನ್ನು ವಿಭಜಿಸಿ, ಭಾರತೀಯರ ಹೃದಯಗಳನ್ನು ಒಡೆಯುವ ಮೂಲಕ ಎಷ್ಟಾಗುತ್ತೋ ಅಷ್ಟು ಮತ ಗಿಟ್ಟಿಸಲು ಯತ್ನಿಸುತ್ತಿದ್ದಾರೆ. ಭಾರತೀಯರನ್ನು ವಿಭಜಿಸಿ, ಹಿಂಸಿಸಿ ಮತ ಗಳಿಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ಕಿಡಿಕಾರಿದರು.
ದಲಿತರು, ಹಿಂದುಳಿದವರು, ಅಲ್ಪ ಸಂಖ್ಯಾತರು, ಮಹಿಳೆಯರು, ದುಡಿಯುವ ವರ್ಗಗಳು, ಶ್ರಮಿಕರು ಆತಂಕ, ಅಭದ್ರತೆಯಲ್ಲಿ ಬದುಕುವಂಥಾ ಸ್ಥಿತಿಗೆ ದೇಶವನ್ನು ದೂಡಿದ್ದರು. ಭಾರತವನ್ನು ಕಟ್ಟಿದ ಸಮುದಾಯಗಳನ್ನು ಛಿದ್ರಗೊಳಿಸುವುದನ್ನು ವಿರೋಧಿಸಿ ಬೆವರಿನ ಸಂಸ್ಕೃತಿಯ ಎಲ್ಲರನ್ನೂ ಒಟ್ಟುಗೂಡಿಸುವ ಸಲುವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಿತು ಎಂದರು.
ರಾಮನಗರ ಜಿಲ್ಲೆಯ ಇವತ್ತಿನ ದುಸ್ಥಿತಿಗೆ ಯಾರು ಕಾರಣ? ಇಷ್ಟು ವರ್ಷ ರಾಮನಗರ ಜಿಲ್ಲೆ ಯಾರ ಹಿಡಿತದಲ್ಲಿತ್ತು? ಎಂದು ತಮಗೆಲ್ಲ ಗೊತ್ತಿದೆ. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಜಿಲ್ಲೆಯ ಜನ ಸಾಕ್ಷಿಯಾಗುತ್ತಾರೆ. ಸಂಸದ ಡಿ.ಕೆ.ಸುರೇಶ್ ಅವರು ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ. ರಾಮನಗರದ ಅಭಿವೃದ್ಧಿ ಪರ್ವವನ್ನು ವೇಗಗೊಳಿಸುವ ಜವಾಬ್ದಾರಿ ನಮ್ಮ ಸರ್ಕಾರದ್ದು. ನಾವು ಇದನ್ನು ಮಾಡಿ ತೋರಿಸ್ತೇವೆ. ಜನವರಿ ವೇಳೆಗೆ ರಾಮನಗರಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.
ಹಿಂದಿನ ಸರ್ಕಾರದ ಸಚಿವ ಅಶ್ವಥ್ ನಾರಾಯಣ್ ಜಿಲ್ಲೆಗೆ ಏಕೆ ಮೆಡಿಕಲ್ ಕಾಲೇಜು ಕೊಡಲಿಲ್ಲ? ಜಿಲ್ಲೆಗೆ ಬಂದಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಗೊಂಡು ಹೋದದ್ದು ಸಚಿವ ಸುಧಾಕರ್. ಇಬ್ಬರೂ ಬಿಜೆಪಿಯವರೇ. ಜಿಲ್ಲೆಗೆ ಅನ್ಯಾಯ ಆಗಿದ್ದು ಇದೇ ಬಿಜೆಪಿಯವರಿಂದ. ಇವರ ಜತೆ ಕೈ ಜೋಡಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಇಬ್ಬರಿಗೂ ನೈತಿಕತೆ ಇಲ್ಲ. ರಾಮನಗರದಲ್ಲಿ, ಕನಕಪುರದಲ್ಲಿ ಎರಡೂ ಕಡೆ ಮೆಡಿಕಲ್ ಕಾಲೇಜು ಬೇಕು ಎಂದರೆ ಎರಡೂ ಕಡೆ ಮಾಡಲು ನಾವು ಸಿದ್ಧ ಎಂದರು.
ನಾವು ಬಡವರ ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕುವ ಕಾರ್ಯಕ್ರಮಗಳನ್ನು ರೂಪಿಸಿದೆವು. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯವರು ಅಂಬಾನಿ-ಅದಾನಿಗಳ ಜೇಬಿಗೆ ಹಣ ಹಾಕುತ್ತಿದ್ದಾರೆ ಎಂದು ದೂರಿದರು.




