ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ

2 years ago

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರ ಗಮನ ಬೇರೆಡೆಗೆ ಸೆಳೆದು ಮತಗಳ ಕ್ರೂಡೀಕರಣಕ್ಕೆ ಯತ್ನ ನಡೆಸಿರುವ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಾಜಿ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ಕೇಂದ್ರದ ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಸಲ್ಲಿಸಿದೆ.

ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನ ಮುಂದುವರೆಸಿದೆ. ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ಮಾಡಿದ್ದಾರೆಂಬ ಸುಳ್ಳು ಆರೋಪವನ್ನು ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯೊಬ್ಬರು ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದ ತೇಜೋವಧೆ ಮಾಡುವ ದುರುದ್ದೇಶದಿಂದ ಯಾವುದೇ ಪುರಾವೆ ಒದಗಿಸದೇ ಮಾಡಿದ ಆರೋಪ ಖಂಡನೀಯ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಿದ್ದರಾಮಯ್ಯನವರು ಈ ಆರೋಪಕ್ಕೆ ಸಾಕ್ಷಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೇಜವಾಬ್ದಾರಿ ಆರೋಪದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಇದೆ. ಅವರು ಪಕ್ಷದ ಕ್ಷಮೆ ಯಾಚಿಸಿ ತಮ್ಮ ಆರೋಪವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಲಾಗಿದೆ. ಚುನಾವಣಾ ಆಯೋಗ ಈ ಹೇಳಿಕೆ ವಿರುದ್ಧ ಕ್ರಮ ಜರುಗಿಸಲು ಕೋರುವುದಾಗಿ ತಿಳಿಸಿದೆ.

ಬಿಜೆಪಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರು ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಇನ್ನೊಂದು ಮನವಿಯಲ್ಲಿ ತಿಳಿಸಿದೆ.

‘ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ, ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳು ಆಗುವುದಿಲ್ಲ’ ಎಂದು ಹೇಳಿಕೆ ನೀಡಿದ ಕುರಿತು ಮನವಿ ಆಕ್ಷೇಪಿಸಿದೆ. ಭಾಷೆಯ ಹೆಸರಿನಲ್ಲಿ ಮತ ಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸದಂತೆ ಹೇಳಿಕೆ ನೀಡಿದ ಜಯಪ್ರಕಾಶ ಹೆಗ್ಡೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮನವಿಯಲ್ಲಿ ಕೋರಲಾಗಿದೆ.

Leave a Reply