ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೀಡಿದ ಬಿಜೆಪಿ

2 years ago

ದೆಹಲಿ: ರಾಜ್ಯ ಬಿಜೆಪಿಯಲ್ಲಿ ಉಲ್ಬಣಿಸಿರುವ ಬಣ ರಾಜಕಾರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಸಮರ ಸಾರಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೀಡಲಾಗಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ನೋಟಿಸ್ ನೀಡಿದ್ದು, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ಹತ್ತು ದಿನಗಳೊಳಗಾಗಿ ಸಮಿತಿಗೆ ವಿವರಣೆ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ. 

ತಮ್ಮ ವಿರುದ್ಧ ಪಕ್ಷದ ಶಿಸ್ತು ಉಲ್ಲಂಘನೆಯ ಹಲವು ಆರೋಪಗಳು ಕೇಳಿಬಂದಿವೆ. ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನಿಮ್ಮ ನಿರಂತರ ವಾಗ್ದಾಳಿ, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುವುದು, ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕ ಹೇಳಿಕೆಗಳು ಮತ್ತು ನಿಲುವುಗಳನ್ನು ಮಾಧ್ಯಮಗಳು ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ಮಾತನಾಡಿರುವುದು ವರದಿಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ವಿರುದ್ಧ ಪಕ್ಷ ಏಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂಬುದಕ್ಕೆ ದಯವಿಟ್ಟು ಕಾರಣ ತೋರಿಸಿ. ಈ ಸೂಚನೆಯ ಸ್ವೀಕೃತಿಯಿಂದ ಹತ್ತು ದಿನಗಳಲ್ಲಿ ವಿವರಣೆಯನ್ನು ಸದಸ್ಯ ಕಾರ್ಯದರ್ಶಿ, ಬಿಜೆಪಿ ಕೇಂದ್ರ ಶಿಸ್ತು ಸಮಿತಿಗೆ ಸಲ್ಲಿಸಬೇಕು. ನಿಗದಿತ ಗಡುವಿನೊಳಗೆ ಸಮಜಾಯಿಷಿ ನೀಡದಿದ್ದರೆ ಹೇಳುವುದು ಏನೂ ಇಲ್ಲವೆಂದು ಪರಿಗಣಿಸಿ ಮುಂದಿನ ಕ್ರಮವಹಿಸಬೇಕಾಗುತ್ತದೆ ಎಂದು ಶೋಕಾಸ್ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.

Leave a Reply