ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ: ಆರ್ ಅಶೋಕ್

2 years ago

ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ.

ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ.

ಇಂತಹ ಸಂದರ್ಭದಲ್ಲಿ ಸಿಎಂ @siddaramaiah ನವರ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳು.

1.) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

2.) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

3.) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದು 17 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ?

4.) ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

5.) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

ಅಕ್ಟೋಬರ್ 18ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮಾನ್ಯ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ.

– ಆರ್ ಅಶೋಕ್, ವಿಪಕ್ಷ ನಾಯಕ

Leave a Reply