ಬಿಜೆಪಿ ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾದ ಪಕ್ಷ: ಸಿದ್ದರಾಮಯ್ಯ

7 months ago

ಕಲಬುರ್ಗಿ: ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಈ ಸಮುದಾಯಗಳ ಆರ್ಥಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತದೆ ಸಮಾನತೆ ಬಯಸದ ಬಿಜೆಪಿ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾದ ಪಕ್ಷವಾಗಿದೆ ಹೀಗಾಗಿ ಸಮೀಕ್ಷೆ ಕಾರ್ಯಕ್ಕೆ ಅಡ್ಡಿ ಮಾಡುತ್ತಿದೆ ಎಂದರು.

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಧರ್ಮದ ಜೊತೆಗೆ ಜಾತಿಯ ಉಪ ಕಾಲಂಗಳನ್ನು ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸುವುದು ಅನಗತ್ಯ. ಮುಸ್ಲಿಂ ಮತ್ತು ಕ್ರಿಶ್ಚಿಯನ್‌ ಸಮುದಾಯದವರು ಈ ದೇಶದ ಪ್ರಜೆಗಳಲ್ಲವೇ? ಎಂದು ಪ್ರಶ್ನಿಸಿದರು.

ಸಮೀಕ್ಷೆಯಲ್ಲಿ ಜನ ನೀಡುವ ಮಾಹಿತಿಯನ್ನು ದಾಖಲಿಸಲಾಗುತ್ತದೆ. ಇದಕ್ಕಾಗಿ 1.75 ಲಕ್ಷ ಶಿಕ್ಷಕರನ್ನು ಸಮೀಕ್ಷೆಗಾಗಿ ನಿಯೋಜಿಸಲಾಗಿದೆ. ಪ್ರತಿಯೊಬ್ಬರಿಗೂ 150 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಲಾಗಿದೆ ಎಂದರು.

ಕುರುಬ ಸಮುದಾಯವನ್ನು ಎಸ್‌‍ಟಿ ಮೀಸಲು ಪಟ್ಟಿಗೆ ಸೇರಿಸಲು ಈ ಹಿಂದಿನ ಬಿಜೆಪಿ ಸರ್ಕಾರವೇ ಪ್ರಕ್ರಿಯೆ ಆರಂಭಿಸಿತ್ತು. ನಾವು ಅದನ್ನು ಮುಂದುವರೆಸಿದ್ದೇವೆ. ರಾಜ್ಯ ಸರ್ಕಾರಕ್ಕೆ ಮೀಸಲು ಪಟ್ಟಿಗೆ ಸೇರಿಸುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಹುದಷ್ಟೇ. ಅಂತಿಮ ತೀರ್ಮಾನವನ್ನು ಕೇಂದ್ರ ಸರ್ಕಾರ ಮಾತ್ರ ತೆಗೆದುಕೊಳ್ಳಲು ಸಾಧ್ಯ ಎಂದರು.

ರಾಜ್ಯದ ಪ್ರಸ್ತಾವನೆಯನ್ನು ಕೇಂದ್ರ ಪರಿಶೀಲಿಸಿದ ಬಳಿಕ ಕುರುಬ ಸಮುದಾಯ ಎಸ್‌‍ಟಿಗೆ ಸೇರಲು ಅವಕಾಶಗಳಿದ್ದರೆ, ಕ್ರಮ ಕೈಗೊಳ್ಳುತ್ತದೆ. ಇಲ್ಲವಾದರೆ ತಿರಸ್ಕರಿಸುತ್ತದೆ. ಈ ವಿಚಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದರು.

Leave a Reply