ಬಿಜೆಪಿಯವರಿಗೆ ವ್ಯವಸ್ಥೆ ಬಳಸಿಕೊಂಡು ವಿಪಕ್ಷದವರಿಗೆ ಕಿರುಕುಳ ನೀಡುವುದೇ ದಂಧೆ: ಲಕ್ಷ್ಮೀ ಹೆಬ್ಬಾಳ್ಕರ್

2 years ago

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ನಾಲ್ಕು ದಶಕಗಳಿಂದ ಕಳಂಕರಹಿತ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಇಂತಹ ಮುಖ್ಯಮಂತ್ರಿಯವರಿಗೆ ಮುಡಾ ಹಗರಣದ ಹೆಸರಿನಲ್ಲಿ ಕಳಂಕ ತರಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಇದರ ಒಳಸಂಚೇನು ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಹಾಸನದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರದಲ್ಲಿರಲಿ, ಕೇಂದ್ರದಲ್ಲಿ ಅಧಿಕಾರದಲ್ಲಿರಲಿ, ವ್ಯವಸ್ಥೆಯನ್ನು ಬಳಸಿಕೊಂಡು ವಿರೋಧ ಪಕ್ಷದವರಿಗೆ ಕಿರುಕುಳ ನೀಡುವುದೇ ದಂಧೆಯಾಗಿದೆ. ಈಗ ಕೇಂದ್ರ ಸರಕಾರದ ಅಧೀನ ಸಂಸ್ಥೆಗಳಾದ ಸಿಬಿಐ, ಇಡಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಹಾಗಾಗಿ, ನಾವು ಒಗ್ಗಟ್ಟಿನಿಂದ ಸರಕಾರವನ್ನು ಸಮರ್ಥಿಸಿಕೊಳ್ಳುವ, ಬಿಜೆಪಿಯವರನ್ನು ಖಂಡಿಸುವ ಕೆಲಸ ಮಾಡಬೇಕಿದೆ ಎಂದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ, ಚುನಾವಣೆಗೂ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಪಕ್ಷದ ಇತಿಹಾಸವೇ ಹಾಗಿದೆ, ತ್ಯಾಗ, ಬಲಿದಾನಗಳಿಂದಲೇ ಕಟ್ಟಲ್ಪಟ್ಟಿರುವ ಪಕ್ಷ ನಮ್ಮದು. ಕೊಟ್ಟ ಮಾತಿನಿಂದ ಎಂದಿಗೂ ಹಿಂದೆ ಸರಿಯುವ ಪಕ್ಷ ನಮ್ಮದಲ್ಲ, ಬಿಜೆಪಿಯವರ ಹಾಗೆ ಸುಳ್ಳು ಹೇಳಿ ಎಂದೂ ಅಧಿಕಾರಕ್ಕೆ ಬಂದಿಲ್ಲ ಎಂದು ತಿರುಗೇಟು ನೀಡಿದರು.

ನಾವು ಕಾಂಗ್ರೆಸಿಗರು ಸದಾ ಬಡವರ ಪರವಾಗಿದ್ದೇವೆ. ನಮಗೆ ಬಡವರ, ದೀನ ದಲಿತರ, ಅಲ್ಪಸಂಖ್ಯಾತರ, ರೈತರ, ಕಾರ್ಮಿಕರ, ಮಹಿಳೆಯರ ಸಬಲೀಕರಣವೇ ಮುಖ್ಯವಾಗಿದೆ ಎಂದರು.

Leave a Reply