ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಅಸ್ತಿತ್ವ ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಜೆಡಿಎಸ್ ಮತ್ತು ಬಿಜೆಪಿಯ ಹಲವು ಮುಖಂಡರು ಪಕ್ಷ ತೊರೆಯಲು ಮುಂದಾಗಿದ್ದಾರೆ.
ಅದರಲ್ಲೂ ಪಕ್ಷದ ಪ್ರಬಲ ಕೋಟೆಯಿಂದ ಹೇಳಲಾಗುತ್ತಿರುವ ತುಮಕೂರು ಜಿಲ್ಲೆಯ ಹಲವರು ಪಕ್ಷಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಹೀಗಾಗಿ ಜೆಡಿಎಸ್ ನ ಹಲವು ನಾಯಕರು ಇದೀಗ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ತುಮಕೂರು ಗ್ರಾಮಾಂತರದ ಶಾಸಕ ಸುರೇಶ್ ಗೌಡ, ಮಾಜಿ ಶಾಸಕ ಬಿಸಿ ಗೌರಿಶಂಕರ್, ತುರುವೇಕೆರೆ ಕ್ಷೇತ್ರದ ಎಂ ಟಿ ಕೃಷ್ಣಪ್ಪ, ಮಸಾಲೆ ಜಯರಾಮ್, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಧುಸ್ವಾಮಿ, ಸುರೇಶ್ ಬಾಬು, ಸಂಸದ ಜಿ ಎಸ್ ಬಸವರಾಜು ಸೇರಿದಂತೆ ಹಲವರು ಈ ಮೈತ್ರಿ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ನಾಯಕರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು ಲೋಕಸಭಾ ಚುನಾವಣೆಯ ವೇಳೆಗೆ ಇವರಲ್ಲಿ ಹಲವರು ತಮ್ಮ ಪಕ್ಷಗಳಿಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ಮುನಿಸಿಕೊಂಡು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಶಫಿ ಅಹಮದ್ ಇದೀಗ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.
ತುಮಕೂರು ಗ್ರಾಮಾಂತರದ ಮಾಜಿ ಶಾಸಕ ಬಿ.ಸಿ. ಗೌರಿಶಂಕರ್ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು ಈಗಾಗಲೇ ಗೃಹ ಸಚಿವ ಡಾ. ಪರಮೇಶ್ವರ್ ಸೇರಿದಂತೆ ಹಲವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅದೇ ರೀತಿಯಲ್ಲಿ ಮಾಜಿ ಮಂತ್ರಿ ಜೆ.ಸಿ.ಮಾಧುಸ್ವಾಮಿ ಕೂಡಾ ಬಿಜೆಪಿಗೆ ಗುಡ್ ಬೈ ಹೇಳಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸಂಸದ ಜಿಎಸ್ ಬಸವರಾಜು ಕೂಡ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಕುರಿತಂತೆ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಮಾತುಕತೆ ನಡೆಸಿದ್ದು, ಗೃಹ ಸಚಿವ ಪರಮೇಶ್ವರ್ ಇವರನ್ನು ಪಕ್ಷಕ್ಕೆ ಕರೆತರಲು ಉತ್ಸುಕರಾಗಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.


