ಬೆಂಗಳೂರು: ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಸದಸ್ಯರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ನೈತಿಕ ಹೊಣೆಯನ್ನು ರಾಜ್ಯಸರ್ಕಾರ ಹೊರಬೇಕು ಎಂದು ಆಗ್ರಹಿಸಿ ಬಿಜೆಪಿ, ಜೆಡಿಎಸ್ ಶಾಸಕರು ಗಾಂಧಿ ಪ್ರತಿಮೆ ಬಳಿ ಸರ್ಕಾರದ ವಿರುದ್ಧ ಘೋಷಣೆಯುಳ್ಳ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಪ್ರತಿಭಟನೆ ನಡೆಸಿದ್ದು, ಸದನದಲ್ಲೂ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಉಭಯ ಪಕ್ಷಗಳ ನಾಯಕರು ಘೋಷಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ, ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಸದನದಲ್ಲೂ ನಾವು ಹೋರಾಟ ಮಾಡುತ್ತೇವೆ ಎಂದರು.
ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣದ ಜವಾಬ್ದಾರಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೊರಬೇಕು. ಜವಾಬ್ದಾರಿಯಿಂದ ನುಣಚಿಕೊಳ್ಳಲು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದ್ದು ರೈತರು ಪ್ರತಿಭಟನೆ ನಡೆಸಿ ಹೋರಾಟ ಮಾಡುತ್ತಿದ್ದಾರೆ, ಉತ್ತರ ಕರ್ನಾಟಕದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿಲ್ಲ, ಪೊಲೀಸ್ ಸಬ್ಇನ್್ಸಪೆಕ್ಟರ್ ನೇಮಕಾತಿ ಪೂರ್ಣಗೊಂಡಿದ್ದರೂ ನೇಮಕಾತಿ ಆದೇಶ ನೀಡುತ್ತಿಲ್ಲ, ರಾಜ್ಯದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ, ಆದರೂ ನೇಮಕಾತಿ ಮಾಡುತ್ತಿಲ್ಲ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಒಳ-ಹೊರಗು ಉಭಯಪಕ್ಷಗಳಿಂದ ಹೋರಾಟ ಮಾಡುತ್ತೇವೆ. ಇಂದು ಸಾಂಕೇತಿಕವಾಗಿ ಗಾಂಧಿಪ್ರತಿಮೆ ಬಳಿ ಪ್ರತಿಭಟನೆ ಮಾಡಿದ್ದೇವೆ ಎಂದರು.
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, 60 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರ ಬ್ರಾಂಡ್ ಆಗಿದೆ. ಕಾಟಾಚಾರಕ್ಕೆ 9 ದಿನ ಅಧಿವೇಶನ ನಡೆಸಲಾಗುತ್ತಿದೆ. ಕನಿಷ್ಠ 20 ದಿನವಾದರೂ ಅಧಿವೇಶನ ನಡೆಸಬೇಕಿತ್ತು. ಬಿಜೆಪಿ, ಜೆಡಿಎಸ್ ನಾಯಕರು ನಿನ್ನೆ ಸಭೆ ಮಾಡಿದ್ದು, ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಆರ್ಸಿಬಿ ವಿಜಯೋತ್ಸವ ಕ್ರೆಡಿಟ್ ತೆಗೆದುಕೊಳ್ಳಲು ಸರ್ಕಾರ ಮುಂದಾಗಿ ದುರಂತಕ್ಕೆ ಕಾರಣವಾಯಿತು. ಆರ್ಸಿಬಿದು ಕಪ್ ಆದರೆ ಸರ್ಕಾರದ್ದು ತಪ್ಪು. ಸಡಗರ ಸಂಭ್ರಮಿಸಲು ಹೋಗಿ 11 ಜನರ ಸಾವಿಗೆ ಕಾರಣವಾಯಿತು. 5 ಅಧಿಕಾರಿಗಳನ್ನು ದುರಂತದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಸರ್ಕಾರ ಸಮರ್ಪಕ ಉತ್ತರ ಕೊಡಬೇಕು. 11 ಜನರ ಸಾವಿಗೆ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.




