ಪೇಸಿಎಂ ಪೋಸ್ಟರ್ ಅನ್ನು ರಾಜ್ಯಾದ್ಯಂತ ಅಳವಡಿಸಲು ಬಿಜೆಪಿ ನಾಯಕರ ತೀರ್ಮಾನ

8 months ago

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಶೇಕಡ 40ರಷ್ಟು ಕಮಿಷನ್ ಆರೋಪ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಂಡಿದೆ.

ತಮ್ಮ ಸರ್ಕಾರದಲ್ಲಿ ಗುತ್ತಿಗೆದಾರರ ಕಮಿಷನ್ ದುಪ್ಪಟ್ಟಾಗಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರವನ್ನು ಸರ್ಕಾರದ ವಿರುದ್ಧ ಸಮರಕ್ಕೆ ಬಳಸಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.

ನಾಡಹಬ್ಬ ವಿಜಯ ದಶಮಿ ಮುಗಿಯುತ್ತಿದ್ದಂತೆ ಕಮಿಷನ್ ಆರೋಪ ಅಸ್ತ್ರವನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಸಮರ ಘೋಷಣೆ ಮಾಡಲು ಬಿಜೆಪಿ ನಿರ್ಧರಿಸಿದೆ.

ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರಂಭಿಸಿದ್ದ ಪಿಎಂ ಅಭಿಯಾನವನ್ನು ಬಿಜೆಪಿ ಕೂಡ ಆರಂಭಿಸಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಬಳಸಿಕೊಂಡು ಪೇಸಿಎಂ ಎಂಬ ಪೋಸ್ಟರ್ ಸಿದ್ಧಪಡಿಸಿದ್ದು ಅದನ್ನು ರಾಜ್ಯಾದ್ಯಂತ ಅಳವಡಿಸಲು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.

ಅಲ್ಲದೆ ರಾಜ್ಯದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಪ್ರತಿಭಟನೆ ನಡೆಸಲು ನಿರ್ಧರಿಸುವ ನಾಯಕರು ರಾಷ್ಟ್ರೀಯ ಮಟ್ಟದಲ್ಲೂ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ ಎಂದು ಬಿಂಬಿಸಲು ಮುಂದಾಗಿದ್ದಾರೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ, ಗುತ್ತಿಗೆದಾರರು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದು ತಕ್ಷಣವೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ನಮ್ಮ ಸರ್ಕಾರ ಇದ್ದ ಸಮಯದಲ್ಲಿ ಇಂತಹ ಆರೋಪ ಕೇಳಿ ಬಂದಾಗ ಕಾಂಗ್ರೆಸ್ ಪೇಸಿಎಂ ಎಂಬ ಅಭಿಯಾನ ಮಾಡಿತ್ತು. ಈ ಸರ್ಕಾರದ ವಿರುದ್ಧವು ಇದೇ ಆರೋಪ ಕೇಳಿಬಂದಿದೆ. ಈಗ ಬಿಜೆಪಿ ನಾಯಕರು ಪೇಸಿಎಂ ಎಂಬ ಸ್ಟಿಕರ್ ಅನ್ನು ಮುಖ್ಯಮಂತ್ರಿಗಳ ಮುಖಕ್ಕೆ ಅಂಟಿಸಬೇಕೇ ಎಂದು ಪ್ರಶ್ನಿಸಿದರು.

ಸರ್ಕಾರದ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಗುತ್ತಿಗೆದಾರರ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಳ್ಳಲಾಗಿದೆ. ಬಿಲ್ ಪಾವತಿ ಮಾಡುವಂತೆ ಕೇಳುವ ಗುತ್ತಿಗೆದಾರರಿಂದ ಕಮಿಷನ್ ಪಡೆದು ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Leave a Reply