ಕಾಂಗ್ರೆಸ್ ವಿರುದ್ಧ ಹೋರಾಡಬೇಕಾದ ಬಿಜೆಪಿ ಆಂತರಿಕ ಸಂಘರ್ಷದಿಂದ ತತ್ತರಿಸಿದೆ: ಬೊಮ್ಮಾಯಿ

1 year ago

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ಅತ್ಯಂತ ಕೆಟ್ಟ ದುರಾಡಳಿತ ನಡೆಸುತ್ತಿದೆ. ಆದರೆ ಇದರ ವಿರುದ್ಧ ಹೋರಾಡಬೇಕಾದ ಬಿಜೆಪಿ ಆಂತರಿಕ ಸಂಘರ್ಷದಿಂದ ತತ್ತರಿಸಿ ಹೋಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ದ ಸಮರ ಸಾರಬೇಕಾಗಿರುವ ಬಿಜೆಪಿ ನಾಯಕರು ಆಂತರಿಕ ಭಿನ್ನಾಭಿಪ್ರಾಯದಿಂದ ಮಾತಿನ ಸಮರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಎಂದರು.

ಎರಡೂ ಕಡೆಯ ನಾಯಕರು ತಾಳ್ಮೆ ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಛ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು ಎಂದರು.

ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ವರಿಷ್ಠರಿಗೆ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಮತ್ತು ಆದಷ್ಟು ಶೀಘ್ರ ಬಿಕ್ಕಟ್ಟು ಬಗೆಹರಿಸಲಿದ್ದಾರೆ ಎಂಬ ವಿಶ್ವಾಸ ಇದೆ ಎಂದರು.

Leave a Reply