ಬೆಂಗಳೂರು: ಜಾಗತಿಕ ಪ್ರತಿಷ್ಠೆಯ ಐ.ಟಿ. ಮೇಳ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) ರಜತೋತ್ಸವ ವರ್ಷದ ಶೃಂಗಸಭೆಯು ನಾಳೆಯಿಂದ ಮೂರು ದಿನಗಳ ಕಾಲ ನಗರದ ಅರಮನೆ ಆವರಣದಲ್ಲಿ ನಡೆಯಲಿದೆ.
ಈ ಸಮಾವೇಶವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್ ರೂಪದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ.ಎನ್ . ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನ. 18ರವರೆಗೆ ಶೃಂಗಸಭೆಯು ನಡೆಯಲಿದೆ. ಮುಂದಿನ ತಲೆಮಾರಿಗೆ ತಂತ್ರಜ್ಞಾನ ಘೋಷವಾಕ್ಯದಡಿ ಈ ಬಾರಿ ಭೌತಿಕವಾಗಿ ನಡೆಸಲಾಗುತ್ತಿದೆ ಎಂದರು.
20 ದೇಶಗಳ 350ಕ್ಕೂ ಹೆಚ್ಚು ಪರಿಣತರು ಭಾಗವಹಿಸುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳುತ್ತಿದ್ದಾರೆ. ಇದರ ಜತೆಗೆ 575 ಪ್ರದರ್ಶಕರು, ನಾವೀನ್ಯತೆಯ ಶಕ್ತಿಯನ್ನು ತೋರಿಸಲು ಬೃಹತ್ ಸಂಖ್ಯೆಯ ನವೋದ್ಯಮಗಳು ಮತ್ತು ಯೂನಿಕಾರ್ನ್ ಕಂಪನಿಗಳು ಇರಲಿವೆ. ಏಷ್ಯಾದ ದೊಡ್ಡ ಸಮಾವೇಶ ಇದಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಭಾರತೀಯ ಸಾಫ್ಟ್ವೇರ್ ತಂತ್ರಜ್ಞಾನ ಪಾರ್ಕ್ಗಳ (ಎಸ್ಟಿಪಿಐ) ಸಹಯೋಗದೊಂದಿಗೆ ಬಿಟಿಎಸ್-25ನ್ನು ಏರ್ಪಡಿಸುತ್ತಿದೆ ಎಂದರು.
ಎಲೆಕ್ಟ್ರಾನಿಕ್ಸ್, ಡೀಪ್ ಟೆಕ್, ಬಯೋಟೆಕ್ ಮತ್ತು ಸ್ಮಾರ್ಟ್ ಅಪ್ ಗಳ ಮೇಲೆ ಗಮನ ಕೇಂದ್ರೀಕರಿಸಲಾಗುವುದು. ಬೆಳ್ಳಿ ಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಲ್ಕು ದೇಶಗಳ ಸಚಿವರು ಭಾಗವಹಿಸಲಿದ್ದಾರೆ. 75 ವಿವಿಧ ಅಧಿವೇಶನಗಳು ಜರುಗಲಿವೆ. ಸ್ಟಾರ್ಟ್ ಅಪ್ಗಳ ಪ್ರಗತಿಯ ಪ್ರದರ್ಶನವೂ ಇರುತ್ತದೆ ಎಂದರು.




