ಬೆಂಗಳೂರು: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದರು.
ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು.
ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದರು.
ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ ಎಂದರು.
ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಇದೇ ವೇಳೆ ಹೇಳಿದರು.
ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದರು.




