ಕೇಂದ್ರ ಸರಕಾರದ ಈ ಬಾರಿಯ ಬಜೆಟ್ ನಿರಾಶಾದಾಯಕ, ಕರ್ನಾಟಕದ ಕಡೆಗಣನೆ: ಎಂ ಬಿ ಪಾಟೀಲ್

1 year ago

ಮುಖ್ಯವಾಗಿ ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ನಿರಾಳತೆ ತಂದುಕೊಡುತ್ತಿರುವಂತೆ ಈ ಬಜೆಟ್ ಭಾಸವಾಗುತ್ತಿದೆ. ಆದರೆ, ವಾಸ್ತವದಲ್ಲಿ ಹಾಗಿಲ್ಲ. 12 ಲಕ್ಷ ರೂಪಾಯಿ ವರೆಗೆ ತೆರಿಗೆ ವಿನಾಯಿತಿ ಅಂದಿದ್ದಾರೆ. ಆದರೆ ಅದಕ್ಕಿಂತ ಒಂದು ರೂಪಾಯಿ ಹೆಚ್ಚಿನ ಆದಾಯ ಬಂದರೂ ಈ ವಿನಾಯಿತಿ ಸಿಗುವುದಿಲ್ಲ. ಬದಲಿಗೆ ಶೇ.20ಕ್ಕೂ ಹೆಚ್ಚು ತೆರಿಗೆ ವಿಧಿಸುತ್ತಾರೆ. ಇದರ ಬದಲು ತೆರಿಗೆದಾರರಿಗೆ ನೇರವಾಗಿ ಮತ್ತು ಸುಲಭವಾಗಿ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕಾಗಿತ್ತು. ಸಮಾಜದ ಈ ನಿರೀಕ್ಷೆಗೆ ಸ್ಪಂದಿಸಲು ಶ್ರೀ ನರೇಂದ್ರ ಮೋದಿ ಸರಕಾರ ವಿಫಲವಾಗಿದೆ. ಇದರ ಬಿಸಿ ಮುಂದಿನ ದಿನಗಳಲ್ಲಿ ಜನರಿಗೆ ಗೊತ್ತಾಗಲಿದೆ.

ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಅವಶ್ಯಕತೆ ಇತ್ತು. ಅದರಲ್ಲೂ ದೇಶದ ಐಟಿ, ಬಿಟಿ, ಸ್ಟಾರ್ಟ್ಅಪ್ ರಾಜಧಾನಿಯಾಗಿರುವ ಕರ್ನಾಟಕಕ್ಕೆ ಮೋದಿ ಸರಕಾರ ನಿರ್ದಿಷ್ಟವಾಗಿ ಯಾವ ಉಪಯುಕ್ತ ಉಪಕ್ರಮವನ್ನೂ ಘೋಷಿಸಿಲ್ಲ. ದೇಶದ ಒಟ್ಟಾರೆ ರಫ್ತು ವಹಿವಾಟಿನಲ್ಲಿ ರಾಜ್ಯದ ಪಾಲು ಅಧಿಕವಾಗಿದೆ. ಆದ್ದರಿಂದ ನಮಗೆ ಏನನ್ನಾದರೂ ಹೆಚ್ಚಿನದನ್ನು ಕೊಡಬೇಕಿತ್ತು. ಬಿಹಾರದಂತಹ ರಾಜ್ಯಕ್ಕೆ ಚುನಾವಣೆ ಮೇಲೆ ಕಣ್ಣಿಟ್ಟುಕೊಂಡು ಯೋಜನೆ ಘೋಷಿಸುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ.

ಉತ್ತರ ಕರ್ನಾಟಕದ ಕಡೆಗಣನೆ: ಉತ್ತರ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಈ ಬಾರಿಯಾದರೂ ಉತ್ತರ ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ಸಂಸ್ಥೆ – #AIMS ಮಂಜೂರು ಮಾಡುತ್ತಾರೆ ಎನ್ನುವ ನಿರೀಕ್ಷೆ ಕೂಡ ಹುಸಿಯಾಗಿದೆ. ಒಟ್ಟಿನಲ್ಲಿ ಇದು ಜನವಿರೋಧಿ ಬಜೆಟ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

– ಎಂ ಬಿ ಪಾಟೀಲ್, ಬೃಹತ್ ಕೈಗಾರಿಕಾ ಸಚಿವ

Leave a Reply