ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಸಾಧ್ಯತೆ

3 years ago

ಬೆಂಗಳೂರು/ದೆಹಲಿ: ಸಂಕ್ರಾಂತಿಯ ವೇಳೆಗೆ ರಾಜ್ಯದ ಬಹು‌ ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಮುಂಬರುವ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಸಂಪುಟ ಪುನಾರಚನೆಗೆ ಹೈಕಮಾಂಡ್ ಚಿಂತನೆ ನಡೆಸಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿಸ್ತರಣೆ ಸಾಕು ಎಂಬ ನಿಲುವು ಹೊಂದಿದ್ದಾರೆ.

ಆರೋಪದ ಸುಳಿಗೆ ಸಿಲುಕಿ ಮಂತ್ರಿ ಸ್ಥಾನ‌ ತೊರೆದು ಇದೀಗ ತನಿಖೆಯ ನಂತರ ಆರೋಪ ಮುಕ್ತರಾಗಿರುವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರೊಂದಿಗೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ದತ್ತಾತ್ರೇಯ ರೇವೂರು‌ ಮತ್ತು ಪೂರ್ಣಿಮಾ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಚಿಂತನೆ ನಡೆಸಿದ್ದು, ಇವರ ಪಟ್ಟಿಯೊಂದಿಗೆ ಸಿಎಂ ದೆಹಲಿಗೆ ಆಗಮಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಭಾಗಿಯಾಗಲಿದ್ದು ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಎಲ್ಲದರ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಿದರು

Leave a Reply