ಶೀಘ್ರದಲ್ಲೇ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ಪ್ರಿಯಾಂಕ್ ಖರ್ಗೆ

2 years ago

ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಮುಖ್ಯಮಂತ್ರಿ Siddaramaiah  ಅವರಿಗೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದು ಸಭೆಯ ದಿನಾಂಕ ಶೀಘ್ರದಲ್ಲಿಯೇ ನಿಗದಿಪಡಿಸಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗಾಗಿ ಆರ್ಟಿಕಲ್ 371 (J) ತಿದ್ದುಪಡಿ ಜಾರಿಗೆ ಬಂದು ಒಂದು ದಶಕ ಕಳೆದಿರುವ ಹಿನ್ನಲೆಯಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಈ ಭಾಗದ ಅಭಿವೃದ್ದಿಗೆ ಸಹಕಾರಿಯಾಗುವಂತ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಡೀ ಸಚಿವ ಸಂಪುಟ ಕಲಬುರಗಿಗೆ ಆಗಮಿಸುತ್ತಿರುವುದು ಹರ್ಷ ತಂದಿದೆ.

ನನ್ನ ಮನವಿಗೆ ಓಗೊಟ್ಟು ಸಭೆ ನಡೆಸಲು ಒಪ್ಪಿರುವ ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಹಾಗೂ ಕಲ್ಯಾಣ ಕರ್ನಾಟಕದ ಎಲ್ಲ ಶಾಸಕರು ಮತ್ತು ಈ ಭಾಗದ ಜನರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಕಲಬುರಗಿ ಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದರಿಂದ ಶಿಕ್ಷಣ, ಆರೋಗ್ಯ, ಮೂಲ ಸೌಲಭ್ಯಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಮತ್ತು ಇದರಿಂದ ಮಹತ್ತರ ಬೆಳವಣಿಗೆಯಾಗಲಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ನಾನು ಹಾಗೂ ನಮ್ಮ‌ ಸರ್ಕಾರ ಸದಾ ಕಟಿಬದ್ಧವಾಗಿದ್ದು ಈ ಉದ್ದೇಶಿತ ಸಭೆ ನಮ್ಮೆಲ್ಲ ಆಶೋತ್ತರಗಳಿಗೆ ಸ್ಪಂದಿಸಲಿದೆ.

– ಪ್ರಿಯಾಂಕ್ ಖರ್ಗೆ ಗ್ರಾಮೀಣಾಭಿವೃದ್ಧಿ ಸಚಿವ

Leave a Reply