ಬಿಜೆಪಿ ಅಕ್ರಮಗಳ ಮುಂದಿನ ಕ್ರಮ ಕುರಿತು ಶಿಫಾರಸು ಮಾಡಲು ಪರಮೇಶ್ವರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

2 years ago

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಲವು ಅಕ್ರಮ ಆರೋಪಗಳ ಬಗ್ಗೆ ಪಟ್ಟಿ ಮಾಡಿ ಮುಂದಿನ ಕ್ರಮಗಳ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಈ ಸಮಿತಿ ಸರ್ಕಾರದಲ್ಲಿನ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಲಿದೆ.

ಪರಮೇಶ್ವರ ನೇತೃತ್ವದ ಈ ಸಮಿತಿಯಲ್ಲಿ ಸಚಿವರಾದ ಎಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಸದಸ್ಯರಾಗಿದ್ದಾರೆ. ಸಮಿತಿಯು ಮುಂದಿನ ಎರಡು ತಿಂಗಳುಗಳ ಒಳಗೆ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್, ಇನ್ನೊಂದು ವಾರದೊಳಗಾಗಿ ಸಮಿತಿಯ ಮೊದಲ ಸಭೆ ನಡೆಯಲಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಗುರುತಿಸಿ, ಪಟ್ಟಿ ಮಾಡಲಾಗಿದೆ. ಅವುಗಳ ಕುರಿತು ಸರ್ಕಾರದ ಮಟ್ಟದಲ್ಲಿ ಕೆಲವು ತೀರ್ಮಾನವಾಗಿದ್ದು, ಇನ್ನೂ ಕೆಲವು ಬಾಕಿ ಇವೆ. ವಿವಿಧ ಹಂತಗಳಲ್ಲಿರುವ ಅವುಗಳನ್ನು ಪರಿಶೀಲಿಸಿ ಸಚಿವ ಸಂಪುಟ ಸಭೆಗೆ ವರದಿ ನೀಡಲಾಗುವುದು. ಸಚಿವ ಸಂಪುಟ ಸಭೆಯೇ ಹಿಂದಿನ ಸರ್ಕಾರದ ಹಗರಣಗಳ ತನಿಖೆಯನ್ನು ನೇರ ನಿಗಾವಣೆ ವಹಿಸಬೇಕೆಂದು ಚರ್ಚಿಸಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಬಹಳಷ್ಟು ಪ್ರಕರಣಗಳು ಧೂಳು ಹಿಡಿದಿವೆ. ಈಗಾಗಲೇ ಇಲಾಖಾವಾರು ವಿಚಾರಣೆ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ತಾವು ಸೂಚನೆ ನೀಡಿದ್ದು, ಪ್ರತಿ ಮೂರು ತಿಂಗಳಿಗೊಮೆ ಪ್ರಗತಿ ಪರಿಶೀಲನೆ ನಡೆಸುವಾಗ ಬಾಕಿ ಪ್ರಕರಣಗಳನ್ನು ಗಮನಿಸಲಾಗುತ್ತಿದೆ ಎಂದರು.

ಸಮಿತಿ ರಚನೆಯನ್ನು ದ್ವೇಷದ ರಾಜಕಾರಣ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಾರೆ, ಅದು ಅವರ ಹಕ್ಕು. ಆಡಳಿತ ಮಾಡುವ ನಮಗೆ ಹೆಚ್ಚಿನ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ನೀಡಬೇಕು. ಹೀಗಾಗಿ ನಮ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

Leave a Reply