14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ

2 years ago

ಬೆಂಗಳೂರು: ಲೋಕಸಭೆಗೆ ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಒಂದು ದಿನ ಮಾತ್ರ ಬಾಕಿ ಇರುವಂತೆ ಎಲ್ಲಾ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಭರಾಟೆಯಿಂದ ನಾಮಪತ್ರ ಸಲ್ಲಿಸಿದ್ದಾರೆ.

ಗುರುವಾರ ಅತ್ಯಂತ ಪವಿತ್ರ ದಿನ ಎಂದು ತಿಳಿದ ಅನೇಕ ಅಭ್ಯರ್ಥಿಗಳು ಮೆರವಣಿಗೆಯ ಶಕ್ತಿ ಪ್ರದರ್ಶನದೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುಗಾರಿಕೆಯನ್ನು ಸಲ್ಲಿಸಿದರು.

ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಕಾರ್ಯಕರ್ತರ ಜತೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದ ಬಿ.ವೈ. ರಾಘವೇಂದ್ರ ಅವರಿಗೆ ಮಾಜಿ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸಾಥ್ ನೀಡಿದರು.

ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪಿ.ಸಿ. ಗದ್ದಿಗೌಡರ್ ಸಹ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಬಂದು ಗದ್ದಿಗೌಡರ್ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಕಲಬುರುಗಿ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಂಸದ ಉಮೇಶ್ ಜಾದವ್ ಸಹ ನಾಮಪತ್ರ ಸಲ್ಲಿಸಿದರು. ರಾಯಚೂರು ಎಸ್‌ಟಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಿವೃತ್ತ ಐಎಎಸ್ ಅಧಿಕಾರಿ ಕುಮಾರನಾಯಕ್ ತಮ್ಮ ನಾಮಪತ್ರ ಸಲ್ಲಿಸಿದರು.

ಇದೇ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವಿ. ನಾಯಕ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿಯವರೆಗೆ ಪ್ರಾಥಮಿಕ ವರದಿಗಳ ಪ್ರಕಾರ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ 178 ನಾಮಪತ್ರಗಳು ಸಲ್ಲಿಕೆಯಾಗಿದೆ ಈ ಪೈಕಿ 165 ಪುರುಷ ಮತ್ತು 17 ಮಹಿಳೆಯರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ 25 ನಾಮಪತ್ರಗಳು ಸಲ್ಲಿಕೆಯಾಗಿದ್ದರೆ, ರಾಯಚೂರಿನಲ್ಲಿ ಅತಿ ಕಡಿಮೆ ಒಂಭತ್ತು ನಾಮಪತ್ರ ಸಲ್ಲಿಕೆಯಾಗಿದೆ.

ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿದ್ದು ಮೇ 7ರಂದು ಈ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

Leave a Reply