ರಾಜ್ಯಕ್ಕೆ ಸಲ್ಲಬೇಕಾದ ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ತಾರತಮ್ಯ ಮಾಡಿಲ್ಲ: ನಿರ್ಮಲಾ ಸೀತಾರಾಮನ್

2 years ago

ಬೆಂಗಳೂರು: ಬರ ಪರಿಹಾರ ಕಾಮಗಾರಿಗೆ ಆರ್ಥಿಕ ನೆರವು ಸೇರಿದಂತೆ ನ್ಯಾಯಯುತವಾಗಿ ರಾಜ್ಯಕ್ಕೆ ಸಲ್ಲಬೇಕಾದ ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಈ ವಿಷಯದಲ್ಲಿ ರಾಜ್ಯ ಸರ್ಕಾರ ಅನಗತ್ಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಚಿಂತಕರ ವೇದಿಕೆ ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ನೀಡಬೇಕಿದ್ದ ಪ್ರತಿ ಪೈಸೆಯನ್ನು ಲೆಕ್ಕ ಹಾಕಲಾಗಿದೆ ಮತ್ತು ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಿರುವ ತೆರಿಗೆ ಪಾಲು ಮತ್ತು ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ ನೀಡಬೇಕಾಗಿರುವ ವಂತಿಗೆ ವಿಷಯದಲ್ಲಿ ಸಾರ್ವಜನಿಕ ಚರ್ಚೆಗೆ ತಾವು ಸಿದ್ದ. ಆದರೆ ರಾಜ್ಯ ಸರ್ಕಾರ ಈ ವಿಷಯದಲ್ಲಿ ಯಾವುದೇ ದಾಖಲೆಗಳನ್ನು ನೀಡದೆ ಚುನಾವಣಾ ಸಮಯದಲ್ಲಿ ಅನಗತ್ಯ ರಾಜಕಾರಣ ಮಾಡುತ್ತಿದೆ ಎಂದರು.

2017 ರಿಂದ 22ರ ನಡುವಿನ ಅವಧಿಯಲ್ಲಿ ರಾಜ್ಯದ ಜಿಎಸ್ಟಿ ಪಾಲಿನಲ್ಲಿ 1.06 ಕೋಟಿ ರೂ.ಗಳನ್ನು ಕರ್ನಾಟಕಕ್ಕೆ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿದೆ ಮತ್ತು ಮಾರ್ಚ್ 2024 ವರೆಗೆ ಕರ್ನಾಟಕಕ್ಕೆ ಯಾವುದೇ ಜಿಎಸ್ಟಿ ಪರಿಹಾರವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದರು.

ಜಿಎಸ್ಟಿ ಪೂರ್ವದ ಬೆಳವಣಿಗೆಯ ದರ ಕೇವಲ ಶೇ 11.68 ರಷ್ಟಿತ್ತು. ಇಂದು ಅದು ಶೇ 15ಕ್ಕೆ ತಲುಪುತ್ತಿರುವುದರಿಂದ, ಅವರು (ಕಾಂಗ್ರೆಸ್) ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಲವು ನೆಪಗಳನ್ನು ಮುಂದೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದರು

ಪ್ರಧಾನಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ, ದೇಶದಾದ್ಯಂತ 80 ಕೋಟಿ ಜನರು ಮತ್ತು ಬೆಂಗಳೂರು ನಗರದ 30.5 ಲಕ್ಷ ಜನರು ಪ್ರತಿ ತಿಂಗಳು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ದೇಶದಾದ್ಯಂತ 52 ಕೋಟಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲೇ 14.68 ಲಕ್ಷ ಜನ್-ಧನ್ ಖಾತೆಗಳನ್ನು ತೆರೆಯಲಾಗಿದೆ. ಕೇಂದ್ರದ ಪ್ರಮುಖ ಮುದ್ರಾ ಯೋಜನೆಯಡಿ ಬೆಂಗಳೂರು ನಗರಕ್ಕೆ 30,490 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ಬೆಂಗಳೂರು ನಗರವೊಂದರಲ್ಲೇ 38.25 ಲಕ್ಷ ಮುದ್ರಾ ಯೋಜನೆಯ ಫಲಾನುಭವಿಗಳು ಇದ್ದಾರೆ. ರಾಜ್ಯ ಎಸ್ಸಿ, ಎಸ್ಟಿ ಮತ್ತು ಮಹಿಳೆಯರಿಗೆ 10 ಲಕ್ಷದಿಂದ 1 ಕೋಟಿ ರೂಪಾಯಿಗಳ ಸಾಲ ನೀಡುವ ‘ಸ್ಟ್ಯಾಂಡ್-ಅಪ್ ಇಂಡಿಯಾ’ ಅಡಿಯಲ್ಲಿ ಅನುದಾನವನ್ನು ಪಡೆದುಕೊಂಡಿದೆ. ಬೆಂಗಳೂರು ನಗರದಲ್ಲಿ ಈ ಯೋಜನೆಯಡಿ 467 ಕೋಟಿ ರೂ. ಗಳನ್ನು ವಿತರಿಸಲಾಗಿದೆ. ಈ ನಗರವೊಂದರಲ್ಲೇ ಈ ಯೋಜನೆಯಡಿ 4,429 ನೋಂದಾಯಿತ ಫಲಾನುಭವಿಗಳಿದ್ದಾರೆ. ಹಾಗೆಯೇ ಬೆಂಗಳೂರು ನಗರದ 1.25 ಲಕ್ಷ ಬೀದಿಬದಿ ವ್ಯಾಪಾರಿಗಳು ಪ್ರಧಾನಮಂತ್ರಿಯವರ ಸ್ವನಿಧಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗಿದ್ದಾರೆ ಎಂದರು.

ಈ ಪೈಕಿ ಶೇ 62 ರಷ್ಟು ಮಹಿಳೆಯರು, ಶೇ 31 ರಷ್ಟು ಒಬಿಸಿ ಮತ್ತು ಶೇ 29 ರಷ್ಟು ಎಸ್ಸಿ ಮತ್ತು ಎಸ್ಟಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ ಬೆಂಗಳೂರು ನಗರ ಪ್ರದೇಶದಲ್ಲಿ 30 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

Leave a Reply