ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ: ಸಿದ್ದರಾಮಯ್ಯ

2 years ago

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾಗುವ ಮೂರು ವಾರಗಳ ಮೊದಲು ಕಾಂಗ್ರೆಸ್ ಪಕ್ಷದ 11 ಖಾತೆಗಳನ್ನು ಜಪ್ತಿ ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ. ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಹೇಳಿದ್ದಾರೆ.

Leave a Reply