ಬೆಂಗಳೂರು: ರಾಜ್ಯದಲ್ಲಿ ವಿಚ್ಛಿದ್ರಕಾರಿ ಶಕ್ತಿಗಳು ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಯತ್ನ ನಡೆಸಿದ್ದು, ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಬೆಂಗಳೂರು ಹೊರ ವಲಯದ ಜಿಗಣಿ ಮತ್ತು ನೆಲಮಂಗಲದಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನದ ಬೆನ್ನಲ್ಲೇ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ.
ಆಯುಧ ಪೂಜೆ ವಿಜಯದಶಮಿ ಸೇರಿದಂತೆ ಹಲವು ಹಬ್ಬ ಆಚರಣೆಗಳು ಮುಂದಿನ ಒಂದೂವರೆ ತಿಂಗಳ ಕಾಲ ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಧ್ವಂಸಕ ಕೃತ್ಯಕ್ಕೆ ಕೆಲವು ಸಂಘಟನೆಗಳು ಸಂಚು ಮಾಡಿವೆ ಎಂದು ಗುಪ್ತದಳ ತನ್ನ ಸಂದೇಶದಲ್ಲಿ ತಿಳಿಸಿದೆ.
ಮೈಸೂರಿನ ಐತಿಹಾಸಿಕ ಜಂಬೂಸವಾರಿ, ಮಡಿಕೇರಿಯ ದಸರಾ, ಚಿತ್ರದುರ್ಗದ ದಸರಾ ಸೇರಿದಂತೆ ರಾಜ್ಯದ ವಿವಿಧ ಕಡೆ ನಡೆಯುತ್ತಿರುವ ಧಾರ್ಮಿಕ ಆಚರಣೆಗಳ ಸಮಯದಲ್ಲಿ ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಸಂಚು ನಡೆದಿದೆ.
ಕೆಲವು ವಿಚ್ಛಿದ್ರಕಾರಕ ಶಕ್ತಿಗಳ ಜೊತೆ ನಂಟು ಹೊಂದಿರುವ ವ್ಯಕ್ತಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಿಚಿತರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಗುಪ್ತದಳ ಸಂದೇಶದಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
ಕೇಂದ್ರ ಗುಪ್ತದಳದ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ.
ರಾಜ್ಯ ಎಲ್ಲಾ ಹೋಟೆಲ್ ಗಳಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೆ ಕೊಠಡಿ ಪಡೆದಿರುವವರ ವಿವರಗಳನ್ನು ನೀಡುವಂತೆ ಸೂಚಿಸಿದ್ದು, ಇಂದಿನಿಂದ ಮುಂದಿನ ಹದಿನೈದು ದಿನಗಳ ಕಾಲ ಹೋಟೆಲ್ ಗಳಲ್ಲಿ ಕೊಠಡಿ ಪಡೆಯುವವರ ವಿವರಗಳನ್ನು ಕಡ್ಡಾಯವಾಗಿ ಸಮೀಪದ ಪೊಲೀಸ್ ಠಾಣೆಗೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ.
ವಿಮಾನ ನಿಲ್ದಾಣ, ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ಭದ್ರತೆ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಐತಿಹಾಸಿಕ ಕಟ್ಟಡಗಳು ಅಣೆಕಟ್ಟು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗಿದೆ.




