ಅಪ್ರಾಪ್ತೆ ಅತ್ಯಾಚಾರ ಆರೋಪಿ ಎನ್ಕೌಂಟರ್ ಪ್ರಕರಣದ ಕುರಿತು ಸಿಐಡಿ ತನಿಖೆ

1 year ago

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಹಂತಕನ ಎನ್ ಕೌಂಟರ್ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಮಂತ್ರಿ ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಕೌಂಟರ್ ಬಗ್ಗೆ ಹಲವರು ವಿಭಿನ್ನ ರೀತಿಯ ಅಭಿಪ್ರಾಯಗಳನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಂಡಿದೆ. ಹೀಗಾಗಿ ಪ್ರಕರಣದ ಕುರಿತು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದರು.

ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ವಿಶೇಷ ಸೂಚನೆಗಳನ್ನು ನೀಡಿದ್ದೇನೆ. ಅದರ ಪ್ರಕಾರ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಎಲ್ಲ ಕೇಸ್‌ಗಳಲ್ಲಿಯೂ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ಒಬ್ಬೊಬ್ಬರ ಟೀಕೆಗೆ ಉತ್ತರಿಸಲು ಆಗುವುದಿಲ್ಲ. ಕೋಪ ಬಂದಾಗ, ನೋವಾದಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅದಕ್ಕೆಲ್ಲ ಉತ್ತರಿಸಲು ಆಗುತ್ತದೆಯೇ? ದೇಶದಲ್ಲಿ ಕಾನೂನು ಇದೆ.‌ ಅದರ‌ ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶ ಹೊರಡಿಸುತ್ತಿದ್ದಂತೆಯೇ ಸರ್ಕಾರದ ಸೂಚನೆ ಮೇರೆಗೆ ಧಾರವಾಡ ಸಿಐಡಿ ಎಸ್ ಪಿ ವೆಂಕಟೇಶ್ ನೇತೃತ್ವದಲ್ಲಿ ಡಿವೈಎಸ್‌ಪಿ ಪುನೀತ್‌ಕುಮಾರ್, ಇನ್ಸ್ಪೆಕ್ಟರ್ ಮಂಜುನಾಥ ಅವರು ಪೊಲೀಸರಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದರು.

ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದ ಕಾಗದಪತ್ರ ಹಾಗೂ ದಾಖಲೆಗಳನ್ನು ಪಡೆದರು. ಬಳಿಕ ಮಗು ಕೊಲೆಯಾದ ಹಾಗೂ ಆರೋಪಿ ಗುಂಡೇಟಿನಿಂದ ಮೃತಪಟ್ಟ ಸ್ಥಳ ಮತ್ತು ಕೆಎಂಸಿ – ಆರ್‌ಐ ಆಸ್ಪತ್ರೆಯ ಶವಾಗಾರಕ್ಕೆ ತೆರಳಿ ಪರಿಶೀಲನೆ ಕೂಡ ನಡೆಸಿದ್ದಾರೆ.

ಆರೋಪಿ ರಿತೇಶ್ ಕುಮಾರ್ನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಸಿಐಡಿ ಅಧಿಕಾರಿಗಳ ಮತ್ತು ಪಂಚರ ಸಮ್ಮುಖದಲ್ಲಿ ಕೆಎಂಸಿ – ಆರ್‌ಐ ಶವಾಗಾರದಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು. ಸಿಐಡಿ ಅಧಿಕಾರಿಗಳ ಸಮ್ಮುಖದಲ್ಲಿ ‌ನಡೆದ ಪರೀಕ್ಷೆಯನ್ನು ಸಂಪೂರ್ಣವಾಗಿ ಚಿತ್ರೀಕರಿಸಲಾಗಿದೆ.

Leave a Reply