ಸಿದ್ದರಾಮಯ್ಯ ವಿರುದ್ಧ ದೂರು: ರಾಜ್ಯಪಾಲರ ನಿರ್ಧಾರ ಘೋಷಣೆ ಸಾಧ್ಯತೆ

2 years ago

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಇಂದು ತಮ್ಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಮನವಿ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಈಗಾಗಲೇ ಶೋಕಾಸ್ ಜಾರಿಗೊಳಿಸಿದ್ದಾರೆ. ಈ ಶೋಕಾಸ್ ಅನ್ನು ವಾಪಸ್ ಪಡೆಯುವಂತೆ ರಾಜ್ಯಪಾಲರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಸಲಹೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಮತ್ತು ಕಾನೂನು ಸಚಿವಾಲಯದ ಅಭಿಪ್ರಾಯ ಕೋರಿರುವ ರಾಜ್ಯಪಾಲರು ನಾಳೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದ್ದು ಎಲ್ಲರ ಗಮನ ರಾಜಭವನದತ್ತ ನೆಟ್ಟಿದೆ.

ರಾಜ್ಯಪಾಲರು ತಮ್ಮ ತೀರ್ಮಾನ ಪ್ರಕಟಿಸುವ ಹಿನ್ನೆಲೆಯಲ್ಲಿ ದಿಡೀರ್ ಬೆಂಗಳೂರಿಗೆ ಆಗಮಿಸಿದ ಎಐಸಿಸಿ ನಾಯಕರದ ಎಂ ಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ತುರ್ತು ಸಭೆ ನಡೆಸಿದರು.

ರಾಜ್ಯಪಾಲರು ಒಂದು ವೇಳೆ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡಿದರೆ ಕೈಗೊಳ್ಳಬೇಕಾದ ಕಾನೂನು ಹೋರಾಟ ಮತ್ತು ರಾಜಕೀಯ ಹೋರಾಟದ ಕುರಿತಂತೆ ಸಮಾಲೋಚನೆ ನಡೆಸಿದರು.

ಈ ವಿಷಯವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸುತ್ತಿರುವ ಪ್ರತಿ ಹೋರಾಟಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಹೈಕಮಾಂಡ್, ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಮತ್ತು ಅವರು ಕೈಗೊಳ್ಳುವ ನಿರ್ಧಾರವನ್ನು ಹೈಕಮಾಂಡ್ ಬೆಂಬಲಿಸಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

Leave a Reply