ಸಾಂಪ್ರದಾಯಿಕ ಗುಲಾಮಗಿರಿಯಿಂದ ಮುಕ್ತವಾದರೆ ಮಾತ್ರ ಸಂಪೂರ್ಣ ಸ್ವಾತಂತ್ರ್ಯ: ಪ್ರೊ. ಎಸ್ ಜಿ ಸಿದ್ಧರಾಮಯ್ಯ

1 year ago

ಬಳ್ಳಾರಿ: ದೇಶ ಸಾಂಪ್ರದಾಯಿಕ ಗುಲಾಮಗಿರಿಯಿಂದ ಮುಕ್ತವಾದರೆ ಮಾತ್ರ ಸಂಪೂರ್ಣ ಸ್ವಾತಂತ್ರ್ಯ ಹೊಂದಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಸಾಹಿತಿ ಪ್ರೊ. ಎಸ್ ಜಿ ಸಿದ್ಧರಾಮಯ್ಯ ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಗಾಲಿ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರ ಕ್ರಾಂತಿಕಾರಕ ಮಾನವ ಧರ್ಮ ಹೊಸ ವೈಚಾರಿಕತೆಯೆಡೆಗೆ ಸಾಗಿತ್ತು. ಭಾಷೆ, ಸಂಸ್ಕೃತಿ, ಪರಂಪರೆಯಲ್ಲಿ ಚಳುವಳಿಗಳಿಂದ ಮೂಡಿದ ಹೊಸ ಬದಲಾಣೆಯಿಂದಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಗುರುತಿಸಿದೆ ಎಂದರು.

ಅಭಿವೃದ್ಧಿಪರ ವಾಸ್ತವಿಕತೆಯಲ್ಲಿ ಜನರು ಜೀವಿಸಿದಾದ ನಿಜವಾದ ಸ್ವಾತಂತ್ರ್ಯದ ಅನುಭವ ನಮಗೆ ಸಿಗುತ್ತದೆ. ಮಹಾನ್  ವ್ಯಕ್ತಿತ್ವವುಳ್ಳ ಗಾಂಧೀಜಿ, ಅಂಬೇಡ್ಕರ್ ಅವರ ವೈಚಾರಿಕ ತತ್ವಗಳಿಂದ ಇಂದು ದೇಶವನ್ನು ಗುರುತಿಸಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಕೋರ್ಸುಗಳನ್ನು ಕಲಿತಲ್ಲಿ ಭವಿಷ್ಯದಲ್ಲಿ ಅವು ಉದ್ಯೋಗ ಸೃಷ್ಟಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ಮುನಿರಾಜು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇನ್ಫೋಸಿಸ್‌ನ ನಾರಾಯಣ ಮೂರ್ತಿ, ಸುಧಾಮೂರ್ತಿ, ಅಂಬಾನಿ, ಅದಾನಿ ಇನ್ನು ಮುಂತಾದ ಸಾಧನೆಗೈದ ವ್ಯಕ್ತಿಗಳ ಬಗ್ಗೆ ತಿಳಿದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್ಗಳನ್ನು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದರು.

ವಿವಿಯ ಕಲಾ ನಿಕಾಯದ ಡೀನ್‌ ಪ್ರೊ. ಎನ್. ಶಾಂತನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಡಾ.ಎನ್.ಸತ್ಯವತಿ, ಗಣಕಯಂತ್ರ ವಿಭಾಗದ ಡಾ.ಹೆಚ್.ರಾಚಪ್ಪ, ಡಾ.ಹನುಮೇಶ್, ಜಯಶೀಲ, ಡಾ.ವೇದಾಂತ ಸೇರಿದಂತೆ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply