ಮಳೆಯಿಂದ ಉಂಟಾಗಿರುವ ಹಾನಿ ಬಗ್ಗೆ ಜಂಟಿ ಸಮೀಕ್ಷೆಯನ್ನು ವಾರದ ಒಳಗೆ ಪೂರ್ಣಗೊಳಿಸಿ

1 year ago

ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಹಾನಿ ಕುರಿತು ಮಂತ್ರಿಗಳು ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಠದ ಸಭೆ ನಡೆಸಿ ಮಾತನಾಡಿದ ಅವರು ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ  551.25 ಕೋಟಿ ಹಾಗೂ ತಹಶೀಲ್ದಾರ್ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದೆ ಎಂದರು.

ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077 ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ ಪರಿಹಾರದ ಜೊತೆಗೆ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ ಎಂದರು.

ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ. ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4 ದಿನಗಳಲ್ಲಿ ಸಮೀಕ್ಷೆ  ಕಾರ್ಯ ಪೂರ್ಣಗೊಳ್ಳಲಿದೆ ಎಂದರು.

ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದರು.

ಕೆಲವು ಕಡೆ ಕೆರೆಗಳ ಒತ್ತುವರಿಯಿಂದಾಗಿ ಮಳೆ ನೀರು ಅನಾಹುತ ಸೃಷ್ಟಿಸಿದೆ ಈ ಹಿಂದೆಯೇ ಕೆರೆಗಳ ಒತ್ತುವರಿ ತೆರವುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಆದರೂ ಅನೇಕ ಕಡೆ ಒತ್ತುವರಿ ತೆರವು ಮಾಡಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು ತಕ್ಷಣವೇ ತೆರವು ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ ಎಂದರು.

ಅತಿವೃಷ್ಟಿಯಿಂದಾಗಿ 12,553ಕಿಮೀ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ 1106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ ಉಂಟಾಗಿರುವ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಲಾಗಿದೆ ಎಂದರು.

Leave a Reply