ಗೊಂದಲ ಇದ್ದರೆ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರಲಿದೆ: ಡಾ. ಜಿ ಪರಮೇಶ್ವರ್

8 months ago

ಬೆಂಗಳೂರು: ಆಡಳಿತ ಪಕ್ಷಗಳಲ್ಲಿ ಯಾವುದೇ ಗೊಂದಲ ಇರಬಾರದು, ಗೊಂದಲ ಇದ್ದರೆ ಅದು ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಅದನ್ನು ನಾವು ಬಗೆಹರಿಸಿಕೊಳ್ಳಬೇಕು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರ ಹಂಚಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್ ಗೊಂದಲದ ಕುರಿತು ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಗೊಂದಲವನ್ನು ಬಗೆಹರಿಸಿಕೊಂಡು ಮುಂದುವರಿಯಬೇಕು. ಇದು ಎಲ್ಲರ ಅಭಿಪ್ರಾಯವಾಗಿದೆ. ಅವರು ಹೇಳಿರುವ ರೀತಿ ನಾವು ಮುಂದುವರಿಯಬೇಕು ಎಂದರು.

ನಾಯಕತ್ವ ವಿಚಾರವಾಗಿ ಹೈಕಮಾಂಡ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರನ್ನು ಕರೆದು ಮಾತನಾಡುವ ಕುರಿತಂತೆ ತಮಗೇನು ಗೊತ್ತಿಲ್ಲ. ಆದರೆ ಡಿಸೆಂಬರ್ 27ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಹಜವಾಗಿ ಇದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರಳಲಿದ್ದಾರೆ. ಆ ವೇಳೆ ಎಲ್ಲಾ ವಿಚಾರ ಚರ್ಚೆಗೆ ಬರಬಹುದು ಎಂದರು.

Leave a Reply