ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಹಿಂಬಾಗಿಲ ಮೂಲಕ ಸಮರ ಸಾರಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳ ಬ್ಯಾಂಕ್ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ ಎಂದು ದೂರಿದರು.
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ರಾಜ್ಯದಲ್ಲಿ 78 ಲಕ್ಷ ಜನರಿಗೆ ಪಕ್ಷದ ಸದಸ್ಯತ್ವ ನೀಡಿ ಪ್ರತಿಯೊಬ್ಬರಿಂದ 10 ರೂ. ಸಂಗ್ರಹಿಸಿ ಎಐಸಿಸಿಗೆ ನೀಡಿದೆವು. ಯುವ ಕಾಂಗ್ರೆಸ್ ಸದಸ್ಯತ್ವದಿಂದ 90 ಕೋಟಿ ಸಂಗ್ರಹವಾಗಿದೆ. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ 2 ಲಕ್ಷ ಸಂಗ್ರಹಿಸಿ ಸುಮಾರು 20 ಕೋಟಿ ಸಂಗ್ರಹಿಸಲಾಯಿತು. ಇದು ನಮ್ಮ ಪಕ್ಷದ ಆದಾಯದ ಮೂಲ ಎಂದರು.
ಈ ಬಾರಿ ಲೋಕಸಭೆ ಚುನಾವಣೆ ಸಮಯದಲ್ಲೂ ದೇಣಿಗೆ ಸಂಗ್ರಹಿಸಲು ಮುಂದಾಗಿದ್ದೆ. ಎಐಸಿಸಿ ನಾಯಕರು ಬೇಡ ಎಂದು ತಿಳಿಸಿದರು. ನಾವು ಪಕ್ಷದ ಕಟ್ಟಡ, ಸಿಬ್ಬಂದಿ ವೇತನ ನೀಡಲು ಪರದಾಡುವ ಸಂದರ್ಭದಲ್ಲಿ ಎಐಸಿಸಿ ಖಾತೆಯಲ್ಲಿನ 290 ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಮೂಲಕ ಮುಟ್ಟುಗೋಲು ಹಾಕಿಸಿದ್ದಾರೆ. ನಾವು ನ್ಯಾಯಾಧಿಕರಣಕ್ಕೆ ಹೋದರೂ ನಮಗೆ ನಿರಾಳತೆ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರ ಬಳಿ ನ್ಯಾಯ ಕೇಳಬೇಕು ಎಂದು ಪ್ರಶ್ನಿಸಿದರು.
ನಮ್ಮದು ವ್ಯವಹಾರಿಕ ಸಂಸ್ಥೆಯಲ್ಲ. ನಮಗೆ ಜನರ ದೇಣಿಗೆ ಮಾತ್ರ ಸಿಗುತ್ತಿದೆ. ನಮಗೆ ಚುನಾವಣಾ ಬಾಂಡ್ ಮೂಲಕ ನಮಗೆ ಸಿಕ್ಕಿರೋದು ಕೇವಲ 11% ಮಾತ್ರ. ಆದರೆ ಬಿಜೆಪಿ ಅವರಿಗೆ 57% ಸಿಕ್ಕಿದೆ. ಇಂದು ಪತ್ರಿಕೆಗಳಲ್ಲಿ ಯಾರು ಯಾರಿಗೆ ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ನಾವು ಮಾಧ್ಯಮಗಳಲ್ಲಿ ಪಕ್ಷದ ವತಿಯಿಂದ ಜಾಹೀರಾತು ನೀಡಲು ಈಗ ಸಾಧ್ಯ ವಾಗದ ಪರಿಸ್ಥಿತಿ ಎದುರಾಗಿದೆ. ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡರೆ ವಿರೋಧ ಪಕ್ಷಗಳು ಚುನಾವಣೆ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.
ನಮ್ಮ 40ವರ್ಷಕ್ಕೂ ಹೆಚ್ಚು ರಾಜಕಾರಣದಲ್ಲಿ ಇಂತಹ ಧೋರಣೆ ನೋಡಿರಲಿಲ್ಲ. ನೋಟು ರದ್ಧತಿ ನಂತರ ಎಲ್ಲಾ ವ್ಯವಹಾರ ಖಾತೆಗಳ ಮೂಲಕವೇ ಆಗುತ್ತಿದೆ. ಕೇಂದ್ರ ಸರ್ಕಾರದ ಈ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೊಲೆ. ಸೋಲುವ ಭಯದಿಂದಾಗಿ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕಿಡಿಕಾರಿದರು.
2004ರಲ್ಲೂ ಬಿಜೆಪಿಯವರು ಇದೇ ರೀತಿ ಅವರು “ಇಂಡಿಯಾ ಶೈನಿಂಗ್” ಎಂದು ಪ್ರಚಾರ ಮಾಡಿದರು. ಈ ಮಧ್ಯೆ ಯುಪಿಎ ಸರ್ಕಾರ ಬಂದಿತು. ಹೀಗಾಗಿ ಈ ಬಾರಿಯೂ ಎಲ್ಲಿ ಅಧಿಕಾರ ಕಳೆದುಕೊಳ್ಳುತ್ತೇವೋ ಎಂಬ ಆತಂಕದಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದರು.




