ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ: ಸಿದ್ದರಾಮಯ್ಯ

2 years ago

ಉಡುಪಿ: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ ಪ್ರಧಾನಿಗಳಿಗೆ ಗೋ ಬ್ಯಾಕ್ ಬಿಜೆಪಿ ಎಂಬ ಪ್ರತಿಭಟನೆ ಮೂಲಕ ಸಂದೇಶ ರವಾನಿಸಬೇಕು ಎಂದು ರಾಜ್ಯದ ಜನರಿಗೆ ಕರೆ ನೀಡಿದರು.

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣವೇ 2023ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಬಿಜೆಪಿಯ ಕೇಂದ್ರ ಸರ್ಕಾರ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರು.

ಬಿಜೆಪಿ ಪಕ್ಷದವರು ಗ್ಯಾರಂಟಿಗಳ ಬಗ್ಗೆ ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ. ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ದುಡ್ಡು ಇರಿಸಲು ಸಾಧ್ಯವಿಲ್ಲ ಎಂಬ ಟೀಕೆ ಬಂದಿತು. ಪ್ರಧಾನಿಯವರು ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗುತ್ತದೆ ಎಂದು ನುಡಿದಿದ್ದರು. ಆದರೆ ಈ ವರ್ಷ 36 ಸಾವಿರ ಹಾಗೂ ಮುಂದಿ ವರ್ಷ 52009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಈ ಬಜೆಟ್ ನಲ್ಲಿ ನಿಗದಿಪಡಿಸಿದ್ದರೂ, ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಇಡಲಾಗಿದೆ. ರಾಜ್ಯ ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50,257 ಕೋಟಿ ಮಾತ್ರ. ಪ್ರದಾನಿ ಮೋದಿಯವರ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆಯವರು ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಯೇ ಇಲ್ಲ. ಇಂತಹ ಸಂಸದರನ್ನು ರಾಜ್ಯದ ಜನ ಆಯ್ಕೆ ಮಾಡಬೇಕೆ? ಎಂದುಪ್ರಶ್ನಿಸಿದರು.

ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಾವು ಶೇ .98ರಷ್ಟು ಭರವಸೆಗಳನ್ನು ಈಡೇರಿಸಿದ್ದರೆ, ಬಿಜೆಪಿಯವರು ಕೇವಲ ಶೇ.10 ರಷ್ಟು ಈಡೇರಿಸಿದ್ದಾರೆ ಎಂದರು.

ನರೇಂದ್ರ ಮೋದಿಯವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ. ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಟ್ಟಿದ್ದೇನೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಮೋದಿಯವರು ಅಧಿಕಾರಕ್ಕೆ ಬರುತ್ತಿದ್ದು, ಈ ಬಾರಿ ಜನರು ರಾಜ್ಯದಲ್ಲಿ ಬಿಜೆಪಿ ಗೋಬ್ಯಾಕ್ ಎನ್ನಬೇಕು ಎಂದು ನೆರೆದಿದ್ದ ಜನರನ್ನು ಕೋರಿದರು.

ಸಂಸದ ಅನಂತಕುಮಾರ್ ಹೆಗಡೆಯವರು ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ. ಇದಕ್ಕೆ ಜನರು ಬಲಿಯಾಗಬಾರದು. ಆದ್ದರಿಂದ ಸಂವಿಧಾನದ ಉಳಿವಿಗಾಗಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದರು.

Leave a Reply