ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಬಗ್ಗೆ ತನ್ನ ತೀರ್ಮಾನವನ್ನು ನೀಡಬೇಕು: ಆರ್. ಅಶೋಕ್

5 months ago

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ವೀಪಕ್ಷದ ನಾಯಕ ಆರ್.ಅಶೋಕ್ ಆಪಾದಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪ್ರಮುಖರಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ಎಚ್ಚರಿಸಿದರು.

ಅಧಿಕಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ ದೊಡ್ಡ ಮಟ್ಟದ ಕದನ ನಡೆದಿದ್ದು, ಇಬ್ಬರು ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಹೀಗಾಗಿ ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು  ಆಗ್ರಹಿಸಿದರು.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದು ಆಪಾದಿಸಿದರು.

ರಾಜ್ಯದಲ್ಲಿ ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಸಲು ಒಂದು ಗ್ಯಾಂಗ್‌, ಇಳಿಸಲು ಮತ್ತೊಂದು ಗ್ಯಾಂಗ್‌ ಕೆಲಸ ಮಾಡುತ್ತಿದೆ ಎಂದರು.

ಈ ನಡುವೆ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಇಲ್ಲಿ ಯಾರು ಮುಖ್ಯಮಂತ್ರಿ ಎಂದು ತಿಳಿಯುತ್ತಿಲ್ಲ. ರಾಹುಲ್‌ ಗಾಂಧಿ ವೀಕ್‌ ಲೀಡರ್‌ ಆಗಿದ್ದು, ಇಡೀ ರಾಜ್ಯದಲ್ಲಿ ವೀಕ್‌ ನಾಯಕತ್ವ ಎದ್ದು ಕಾಣುತ್ತಿದೆ. ಈ ಗೇಮ್‌ಗಳ ನಡುವೆ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಬಗ್ಗೆ ತನ್ನ ತೀರ್ಮಾನವನ್ನು ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ನ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆಶಿ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಪಾಡು ಬಂದಿರುವುದು ಶೋಚನೀಯ. 136 ಶಾಸಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿರೋಧ ಪಕ್ಷದ ಕಾಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಹೇಳುವುದಾದರೆ, ನಮ್ಮ ವಿರೋಧ ಪಕ್ಷ ಬಲವಾಗಿದೆ ಎಂದರ್ಥ. ಸರ್ಕಾರಕ್ಕೆ ಅಂಕುಶ ಹಾಕಲು ನಾವಿದ್ದೇವೆ. ನಾವು ಅದನ್ನು ಸಮರ್ಥವಾಗಿ ಮಾಡುತ್ತಿದ್ದೇವೆ ಎಂದರು.

Leave a Reply