ದೆಹಲಿಗೆ ತೆರಳಲಿದ್ದಾರೆ ಕಾಂಗ್ರೆಸ್ ನಾಯಕರು

1 year ago

ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿದ್ದು, ಜನವರಿ 14ರಂದು ವರಿಷ್ಠರ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು ದೆಹಲಿಗೆ ತೆರಳುತ್ತಿದೆ.

ಈ ನಡುವೆ ಜನವರಿ 13ರಂದು ಕರೆದಿರುವ ಶಾಸಕಾಂಗ ಪಕ್ಷದ ಸಭೆ ಕುತೂಹಲ ಮೂಡಿಸಿದರೆ ಡಿ ಕೆ ಶಿವಕುಮಾರ್ ಶತ್ರು ಸಂಹಾರಕ್ಕೆ ಹೆಸರಾದ ತಮಿಳುನಾಡಿನ ಪ್ರತ್ಯಂಗಿರಾ ದೇವಿಯ ಆರಾಧನೆಯಲ್ಲಿ ತೊಡಗಿರುವುದು ವಿದ್ಯಮಾನಗಳನ್ನು ರಂಗೇರಿಸಿದೆ.

ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬೇಡಿಕೆ ಏಕಾಏಕಿ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಮಂತ್ರಿಗಳ ಔತಣ ಕೂಟ ಸಭೆಗಳು ನಡೆದಿದ್ದವು. ಇಂತಹ ಸಭೆಗಳಿಂದ ಪಕ್ಷದಲ್ಲಿ ಗೊಂದಲ ಉಂಟಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ವರಿಷ್ಠರ ಗಮನಕ್ಕೆ ತಂದಿದ್ದರು. ಇದನ್ನು ಪರಿಗಣಿಸಿದ ಹೈಕಮಾಂಡ್ ಔತಣಕೂಟ ಸಭೆಗಳನ್ನು ನಿಯಂತ್ರಿಸಿದೆ. 

ತಮ್ಮ ಸಭೆಗೆ ಹೈಕಮಾಂಡ್ ಬ್ರೇಕ್ ಹಾಕಿದ ಬೆನ್ನಲ್ಲೇ ಶಿವಕುಮಾರ್ ವಿರುದ್ಧ ಸಚಿವರಾದ ಡಾ ಕೆ ಪರಮೇಶ್ವರ್, ಕೆ ಎನ್ ರಾಜಣ್ಣ ಮತ್ತು ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ ಗಾಂಧಿ ನಡಿಗೆ ಕಾರ್ಯಕ್ರಮದ ಕುರಿತು ಚರ್ಚಿಸುವ ಹೆಸರಿನಲ್ಲಿ ಸಿದ್ದರಾಮಯ್ಯ ಜನವರಿ 13ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಇದಾದ ಬಳಿಕ ನವೀಕರಣಗೊಂಡ ಎಐಸಿಸಿ ಕಚೇರಿ ಉದ್ಘಾಟನೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ. 

ಜನವರಿ 15ರಂದು ಎಐಸಿಸಿ ಕಚೇರಿ ಉದ್ಘಾಟನೆ ನಡೆಯಲಿದೆ. ಅದಕ್ಕೂ ಒಂದು ದಿನ ಮೊದಲೇ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಜಿ ಪರಮೇಶ್ವರ್, ಎಂ ಬಿ ಪಾಟೀಲ್ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನೇಮಕ, ಸಂಪುಟ ವಿಸ್ತರಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆ ಇದೆ. 

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಸುದೀರ್ಘ ಅವಧಿಗೆ ಈ ಹುದ್ದೆ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ಬದಲಾಯಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಈ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಯುವ ಸಾಧ್ಯತೆ ಇದೆ.

Leave a Reply