ಬಳ್ಳಾರಿ: ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ರಾಜ್ಯದಲ್ಲಿ ಬಿರುಸಿನ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬಿಜೆಪಿ ಹವಾ ಸೃಷ್ಟಿಸುವ ಪ್ರಯತ್ನ ಮಾಡಿದರು.
ಈ ಹಿಂದೆ ಬಿಜೆಪಿ ಪರವಾಗಿ ಗೋಡೆಯಂತೆ ನಿಂತಿದ್ದ ಮಾಜಿ ಮಂತ್ರಿ ಜನಾರ್ದನ ರೆಡ್ಡಿ ಇದೀಗ ಬಿಜೆಪಿ ನಾಯಕರಿಂದ ದೂರಾಗಿ ಹೊಸ ಪಕ್ಷ ಕಟ್ಟಿದ್ದಾರೆ. ಇದರಿಂದ ಪಕ್ಷದ ಮೇಲಾಗುವ ಸಂಭವನೀಯ ಹಾನಿ ತಡೆಗಟ್ಟಲು ಅಮಿತ್ ಶಾ ಪ್ರಯತ್ನ ನಡೆಸಿದರು. ಈ ಹಿನ್ನೆಲೆಯಲ್ಲಿ ಅವರು ನಡೆಸಿದ ಚಟುವಟಿಕೆಗಳು ಗಮನ ಸೆಳೆದವು.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಸಿದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ಪೈಪೋಟಿ ಉಂಟಾಗಿದ್ದು ಇಂತಹವರಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದರು.
ಬಳ್ಳಾರಿಯ ಎಸ್ಆರ್ಎಸ್ ಮೈದಾನದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದು ಸಲ ಮೋದಿ ಮತ್ತು ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಟ್ಟು ಬಿಜೆಪಿಗೆ ಬಹುಮತ ನೀಡಿ. ಕರ್ನಾಟಕವನ್ನು ಭ್ರಷ್ಟಚಾರ ಮುಕ್ತ ಮಾಡುತ್ತೇವೆ ಎಂದು ಘೋಷಿಸಿದರು.
ಬಿಜೆಪಿ ಬಹಿರಂಗ ಸಭೆಗೆ ಸಿದ್ದಪಡಿಸಿದ ಶ್ರೀಕ್ಷೇತ್ರ ಸ್ಕಂದಗಿರಿ ವೇದಿಕೆಗೆ ಆಗಮಿಸಿದ ಅಮಿತ್ ಶಾ ತಮ್ಮ ಭಾಷಣ ಆರಂಭಿಸುತ್ತಿದ್ದಂತೆ ಸಂಡೂರು ಕುಮಾರಸ್ವಾಮಿ, ವಿಠೋಬ ದೇವರಿಗೆ ನಮಸ್ಕರಿಸಿದರು. ಇದು ಹಕ್ಕಬುಕ್ಕರ ಭೂಮಿ, ಶ್ರೀಕೃಷ್ಣ ದೇವರಾಯರ ನಾಡು. ಯಶವಂತರಾವ್ ಘೋರ್ಪಡೆ ಬದುಕಿ ಬಾಳಿದ ನೆಲದಲ್ಲಿ ನಿಂತು ಮಾತನಾಡುತ್ತಿರುವುದಕ್ಕೆ ನನಗೆ ಹೆಮ್ಮೆ ಆಗಿದೆ ಎಂದರು.
ರಾಮಮಂದಿರ ಬೇಕೆ ಬೇಡವೇ? 370ವಿಧಿ ರದ್ದಾಗಬೇಕೆ ಬೇಡವೇ? ಎಂದು ನೆರೆದಿದ್ದ ಜನ ಸಮೂಹವನ್ನು ಪ್ರಶ್ನಿಸಿದ ಅವರು. ಈ ಎರಡು ಕೆಲಸವನ್ನು ಮೋದಿ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತುಕಡೆ ತುಕಡೆ ಗ್ಯಾಂಗ್ ಕಟ್ಟಿಕೊಂಡು ದೇಶ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸುಭದ್ರ ಸರ್ಕಾರ ನೀಡುವ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಕರ್ನಾಟಕದಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರವನ್ನು ತರಲು ಸಂಕಲ್ಪ ಮಾಡಿ, ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬಂದರೆ ಕರ್ನಾಟಕವನ್ನು ದಕ್ಷಿಣ ಭಾರತದಲ್ಲಿ ನಂ.1 ರಾಜ್ಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.
ಜೆಡಿಎಸ್ಗೆ ನೀವು ಕೊಡುವ ಒಂದೊಂದು ವೋಟು ಕಾಂಗ್ರೆಸ್ಗೆ ಹೋಗಲಿದೆ. ಕಾಂಗ್ರೆಸ್ಗೆ ಕೋಡುವ ಒಂದೊಂದು ವೋಟು ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರಕ್ಕೆ ಹೋಗಲಿದೆ ಎಂದು ಟೀಕಿಸಿದರು.
ಕುಟುಂಬ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿವೆ. ಪ್ರಜಾಪ್ರಭುತ್ವದಲ್ಲಿ ಕುಟುಂಬ ರಾಜಕಾರಣ ಮಾಡುವ ಯಾವುದೇ ಪಕ್ಷದಿಂದ ಜನರ ಕಲ್ಯಾಣ ಸಾಧ್ಯವಿಲ್ಲ ಎಂದರು.
ಇದಕ್ಕೂ ಮುನ್ನ ಸಂಡೂರಿನಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿಯೊಂದೇ ಉತ್ತರ ಎಂದು ತಿಳಿಸಿದರು.
ದೇಶದ ಸುರಕ್ಷತೆಗಾಗಿ ಮೋದಿಜಿ ಪಿಎಫ್ಐ ನಿಷೇಧಿಸಿದರು. ಆದರೆ, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಪಿಎಫ್ಐ ನಾಯಕರ ಪ್ರಕರಣಗಳನ್ನು ಹಿಂದಕ್ಕೆ ಪಡೆದಿತ್ತು ಎಂದು ಟೀಕಿಸಿದರು. ಅಯೋಧ್ಯೆ ರಾಮಮಂದಿರ ವಿಳಂಬಕ್ಕೆ ಕಾಂಗ್ರೆಸ್ ಕಾರಣ. ಮೋದಿಜಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದಾರೆ ಎಂದರು.
ಮೋದಿ ಸರಕಾರವು ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೆ ದಿಟ್ಟ ಉತ್ತರ ಕೊಟ್ಟಿರುವುದು ನೆನಪಿನಲ್ಲಿದೆ. ದೇಶದ ಸಮೃದ್ಧತೆ, ಸುರಕ್ಷತೆಗಾಗಿ ಮೋದಿಜಿ ನಾಯಕತ್ವವನ್ನೇ ಆಯ್ಕೆ ಮಾಡಿ ಎಂದರು.
ಗ್ಯಾಸ್, ಶೌಚಾಲಯ, ವಿದ್ಯುತ್, ಬ್ಯಾಂಕ್ ಖಾತೆ, 5 ಲಕ್ಷದ ಆರೋಗ್ಯ ವಿಮೆ, ಉಚಿತ ಕೋವಿಡ್ ಲಸಿಕೆ- ಇವೆಲ್ಲವೂ ಮೋದಿಜಿ ಅವರ ಕೊಡುಗೆ. ಬಳ್ಳಾರಿ ಮಾತ್ರವಲ್ಲದೆ, ರಾಜ್ಯಕ್ಕೆ ಗರಿಷ್ಠ ಅನುದಾನವನ್ನು ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿಯಡಿ 6 ಸಾವಿರ ಕೊಡಲಾಗಿದೆ. ಯಡಿಯೂರಪ್ಪ- ಬೊಮ್ಮಾಯಿ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಈ ಪರಿಸರದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.
ಕೇಂದ್ರ- ರಾಜ್ಯದ ಜನಪರ ಯೋಜನೆಗಳನ್ನು ಗಮನಿಸಿ ಮತ ಕೊಡಿ. ಪಕ್ಷವು 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಬಿ.ಶ್ರೀರಾಮುಲು ಅವರು ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು ಬಿಜೆಪಿಗೆ ಅಧಿಕಾರ ಕೊಡಿ ಎಂದರು.
ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದರಾದ ದೇವೇಂದ್ರಪ್ಪ, ಕರಡಿ ಸಂಗಣ್ಣ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.




