ಕಾಂಗ್ರೆಸ್ ಕನಿಷ್ಠ 20 ಲೋಕಸಭೆ ಸ್ಥಾನಗಳಲ್ಲಿ ಜಯಿಸಲಿದೆ: ಈಶ್ವರ ಖಂಡ್ರೆ

2 years ago

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಬದಲಾಗಿ ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ಹೇಯ ಕೃತ್ಯ. ಈ ಪ್ರಕರಣ ಈಗ ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.

ವಿಪಕ್ಷ ನಾಯಕರು ತನಿಖೆಯ ದಿಕ್ಕು ತಪ್ಪಿಸಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಹಲವು ಮಹಿಳೆಯರು ಈಗಾಗಲೇ ಅತ್ಯಾಚಾರದ ದೂರು ದಾಖಲಿಸಿದ್ದು, ಪ್ರಮುಖ ಆರೋಪಿಗೆ ಶಿಕ್ಷೆ ಆಗಬೇಕೋ ಬೇಡವೋ ಎಂದು ಪ್ರಶ್ನಿಸಿದರು.

ಪ್ರತಿಪಕ್ಷದವರಿಗೆ ಬದ್ಧತೆ ಇದ್ದರೆ ಪ್ರಜ್ವಲ್ ರೇವಣ್ಣನನ್ನು ಕರೆತಂದು ಪೊಲೀಸರಿಗೆ ಒಪ್ಪಿಸಬೇಕು. ತೋರಿಕೆಗೆ 48 ಗಂಟೆಯಲ್ಲಿ ಬಂದು ಬಿಡಿ ಎಂದು ಹೇಳಿದರೆ ಆಗದು. ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದರು.

ಪ್ರಜ್ವಲ್ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್ ಪೋಲ್ ನೆರವಿನಿಂದ ಆರೋಪಿ ಬಂಧನಕ್ಕೆ ಸಹಕಾರ ನೀಡಬೇಕು ಎಂದರು.

ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ. ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.

Leave a Reply