ಸಿದ್ದರಾಮಯ್ಯ ಸರ್ಕಾರ ಪತನಕ್ಕೆ ಕಾಂಗ್ರೆಸ್ಸಿಗರೇ ಸಂಚು ರೂಪಿಸಿದ್ದಾರೆ: ವಿಜಯೇಂದ್ರ

1 year ago

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಪತನಕ್ಕೆ ಕಾಂಗ್ರೆಸ್ಸಿಗರೇ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ಸಿನ ಘಟಾನುಘಟಿಗಳು, ಹಿರಿಯ ಮಂತ್ರಿಗಳು ಸಾವಿರಾರು ಕೋಟಿಯೊಂದಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೂ ಬಂದಿದೆ ಎಂದರು.

ತಮ್ಮ ಪಕ್ಷದ ಹಿರಿಯ ನಾಯಕರು ನಡೆಸುತ್ತಿರುವ ಈ ಪ್ರಯತ್ನದ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೂ ಈ ಮಾಹಿತಿ ಸಿಕ್ಕಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ಸಿನ ಘಟಾನುಘಟಿ ನಾಯಕರು ಮಾಡುತ್ತಿರುವ ಈ ಪ್ರಯತ್ನದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ ಎಂಬುದು ಸ್ವತಃ ಸಿದ್ದರಾಮಯ್ಯನವರಿಗೆ ಮನವರಿಕೆ ಆಗಿದೆ. ಹಾಗಾಗಿ ಬಿಜೆಪಿ ವಿರುದ್ಧ ಈ ರೀತಿ ಆರೋಪ, ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಈ ವಿಷಯದಲ್ಲಿ ಎಲ್ಲವೂ ಸ್ಪಷ್ಟವಾಗಿದೆ ಈಗ ಗೊತ್ತಾಗಬೇಕಾಗಿರುವುದು ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಅಷ್ಟೇ ಎಂದರು.

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ವಿಚಾರದಲ್ಲಿ ಬದಲಾವಣೆ ಆಗುವುದಿಲ್ಲ. ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಯಾವಾಗ ಬೇಕಿದ್ದರೂ ತೀರ್ಮಾನ ಆಗಲಿದೆ. ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎಂದರು.

Leave a Reply