ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣ ಎನ್‌ಐಎಗೆ ವಹಿಸಬೇಕು: ಪ್ರಹ್ಲಾದ್‌ ಜೋಶಿ

11 months ago

ವೀರೇಂದ್ರ ಹೆಗ್ಗಡೆ ಬೆಂಬಲಿಸಿ ಬಿಜೆಪಿ ಧರ್ಮ ಯಾತ್ರೆ

ಬೆಂಗಳೂರು: ಧರ್ಮಸ್ಥಳ ಅಸಹಜ ಸಾವುಗಳ ಆರೋಪದ ಪ್ರಕರಣದ ಹೆಸರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ತನಿಖೆ ನಡೆಸಲು ಆಗ್ರಹಿಸಿದೆ.

ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂದು ಬೃಹತ್ ಧರ್ಮ ಯಾತ್ರೆ ನಡೆಸಿದ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಮತ್ತು ತಲೆ ಬುರುಡೆ ಖ್ಯಾತಿಯ ಹೋರಾಟಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ಧರ್ಮಸ್ಥಳ ಐತಿಹಾಸಿಕ ಸ್ಥಳ, ಪವಿತ್ರ ಭೂಮಿ. ಧರ್ಮಸ್ಥಳ- ನಮ್ಮ ಧರ್ಮ, ನಂಬಿಕೆ ಮತ್ತು ಇತಿಹಾಸ ಹಾಗೂ ಧಾರ್ಮಿಕತೆಯ ಭವಿಷ್ಯದ ಸಂಬಂಧ ಹೊಂದಿದೆ. ಧರ್ಮಸ್ಥಳ ಧರ್ಮದ ಸ್ಥಾನ. ಧರ್ಮಸ್ಥಳದ ಹೆಸರಿಗೆ ಕಪ್ಪು ಚುಕ್ಕೆ ಹಚ್ಚಲು ಪಣತೊಟ್ಟ ಕಾಣದ ಕೈಗಳು ಇಂದು ಹೆದರಿವೆ. ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣ ಎನ್‌ಐಎಗೆ ವಹಿಸಬೇಕು ಎಂದರು.

ಧರ್ಮಸ್ಥಳದ ಪಾವಿತ್ರ್ಯ ಹಾಳು ಮಾಡಬೇಕೆಂಬ ಪಿತೂರಿ ಮುರಿದು ಹೋಗುತ್ತಿದೆ. ಧರ್ಮಸ್ಥಳದ ಮೇಲೆ ನಡೆದ ದಾಳಿಗೆ ಧರ್ಮವೇ ಉತ್ತರವನ್ನು ನೀಡುತ್ತಿದೆ. ಅಂದು ಇತಿಹಾಸದಲ್ಲಿ ಭಾರತದ ಹಿಂದೂ ದೇವಾಲಯಗಳ ಮೇಲೆ ಆಕ್ರಮಣಗಳು ನಡೆದವು. ಇಂದು ಸಹ ನಮ್ಮ ದೇವಾಲಯಗಳ ಮೇಲೆ ಎಡಪಂಥೀಯ ಸರ್ಕಾರಗಳು, ಕಾಣದ ಕೈಗಳ ಆಕ್ರಮಣ ಮುಂದುವರೆಯುತ್ತಲೇ ಇದೆ. ದೇವಾಲಯಗಳು ನಮ್ಮ ಧರ್ಮದ ಪ್ರಾಣವಾಯು. ಇವು ಯಾರ ಆಸ್ತಿ ಅಲ್ಲ, ಇದು ಭಕ್ತರ ಆಧ್ಯಾತ್ಮಿಕ ಕೇಂದ್ರ. ಧರ್ಮಸ್ಥಳದ ಪರದ ಹೋರಾಟ ರಾಜಕೀಯವಲ್ಲ, ಇದು ಧರ್ಮ – ಸಂಸ್ಕೃತಿಯ ರಕ್ಷಣೆಗಾಗಿ ನಡೆಯುತ್ತಿರುವ ಪ್ರಾಮಾಣಿಕ ಹೋರಾಟ ಎಂದರು.

Leave a Reply