ಬಳ್ಳಾರಿ: ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ಸಂಘಟಿಸಿದ್ದಕ್ಕಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ರಾಜ್ಯಮಟ್ಟದ ಪ್ರಶಸ್ತಿ ದೊರೆತಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ-2024′ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು, ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಪ್ರಶಸ್ತಿ ನೀಡಿದರು.
ಪ್ರಶಸ್ತಿಯು ಫಲಕ ಹಾಗೂ ರೂ.1 ಲಕ್ಷದ ಚೆಕ್ ಒಳಗೊಂಡಿದೆ. ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅನುಷ್ಠಾನ ವಿಭಾಗದಲ್ಲಿ ಈ ಪ್ರಶಸ್ತಿ ಸಿಕ್ಕಿದೆ.
ಜ.26 ರಿಂದ ಫೆ. 23ರವರೆಗೆ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವಿವಿಧ ಹಳ್ಳಿಗಳಿಗೆ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ತೆರಳಿತ್ತು. ಈ ವೇಳೆ ಸಂಪನ್ಮೂಲ ವ್ಯಕ್ತಿಗಳು ಸಂವಿಧಾನದ ಕುರಿತು ಉಪನ್ಯಾಸ ನೀಡಿದ್ದರು.
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳ್ಳಲು ಶ್ರಮಿಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸಿದೆ.




