ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಪರಾಧ ಪ್ರಕರಣಗಳು ಹೆಚ್ಚಿವೆ: ಆರ್.ಅಶೋಕ್

2 years ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಪರಾಧ ಪ್ರಕರಣಗಳು ಹೆಚ್ಚಿವೆ. ಗಲಾಟೆ, ಚಾಕು ಇರಿತದ ಪ್ರಕರಣಗಳು ಹೆಚ್ಚಿದೆ. ಒಂದು ರೀತಿಯಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ಮೇಲೆ ಹಲ್ಲೆ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ತಾಲಿಬಾನ್ ಸರ್ಕಾರಕ್ಕೆ ಬಿಜೆಪಿ ಪಾಠ ಕಲಿಸಲಿದೆ ಎಂದರು.

ಭಾರತ್ ಮಾತಾ ಕೀ ಜೈ ಅಂದವರ ಮೇಲೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಸರ್ಕಾರ ಬಂದ ಮೇಲೆ ಗಲಾಟೆಗಳು, ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಈ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಹಾಗಾಗಿ ಗಲಾಟೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ ಎಂದರು.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹೋರಾಟ ನಡೆಸಲಿದೆ. ನಾಳೆ ಸಭೆ ಸೇರಿ ಹೋರಾಟದ ರೂಪುರೇಷೆಗಳನ್ನು ತೀರ್ಮಾನ ಮಾಡುತ್ತೇವೆ ಎಂದರು.

ನಟ ದರ್ಶನ್ ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾನೂನನ್ನು ಕೈಗೆತ್ತಿಕೊಂಡಿದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದರು.

ಕೊಲೆಯಾಗಿರುವ ರೇಣುಕಸ್ವಾಮಿ ಕುಟುಂಬದ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಆತ ಅಮಾಯಕ, ಆತನ ಹೆಂಡತಿ ಗರ್ಭಿಣಿ ಬೇರೆ, ಕಣ್ಣಲ್ಲಿ ನೀರು ಬರುತ್ತದೆ. ರೇಣುಕಸ್ವಾಮಿ ತಪ್ಪು ಮಾಡಿದ್ದರೆ ಕರೆಸಿ ಬುದ್ಧಿ ಹೇಳಬೇಕಿತ್ತು. ಅದು ಬಿಟ್ಟು ಕಾನೂನು ಕೈಗೆತ್ತಿಕೊಂಡಿದ್ದು ಸರಿಯಲ್ಲ ಎಂದರು.

ಈ ಘಟನೆ ಇಡೀ ಚಿತ್ರರಂಗಕ್ಕೆ ಕಳಂಕ. ಕೊಲೆಯಾದವನು ಯಾವುದೇ ಕ್ರಿಮಿನಲ್ ಚಟುವಟಿಕೆಯಲ್ಲಿ ಇರಲಿಲ್ಲ. ಆತ ಅಮಾಯಕ. ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕು ಎಂದರು.

Leave a Reply