ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿಗೆ ತೀರ್ಮಾನಿಸಿದ್ದು, ಮುಂದಿನ ತಿಂಗಳಿನಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರೆತೆಗೆ ಪರಿಹಾರ ಸಿಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಮನಗರದಲ್ಲಿ ಸ್ವಚ್ಚ ಆಸ್ಪತ್ರೆ ನಮ್ಮಆದ್ಯತೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸದ್ಯದಲ್ಲೇ 3 ಸಾವಿರಕ್ಕೂ ಹೆಚ್ಚು ವೈದ್ಯರು ಲಭ್ಯರಾಗಲಿದ್ದಾರೆ. ಇದರಿಂದ ಮುಂದಿನ ತಿಂಗಳಿನಿಂದ ವೈದ್ಯರ ಕೊರತೆಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.
ವೈದ್ಯರ ಗ್ರಾಮೀಣ ಸೇವೆಯಡಿ 3 ಸಾವಿರಕ್ಕೂ ಹೆಚ್ಚು ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಗೆ ಲಭ್ಯವಾಗಲಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸರಿಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ತಿಂಗಳಿನಿಂದ ವೈದ್ಯರ ಕೊರತೆ ನೀಗಿಸುವ ಕಾರ್ಯ ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.
ಅಲ್ಲದೇ ಪಿ.ಜಿ ಡಾಕ್ಟರ್ಸ್ ಕೂಡ ಒಂದು ವರ್ಷ ಕಡ್ಡಾಯ ಸೇವೆಗೆ ಸಿಗಲಿದ್ದಾರೆ. ಹೀಗಾಗಿ ಎಲ್ಲೆಲ್ಲಿ ವೈದ್ಯರ ಕೊರತೆ ಇದೆ ಎಲ್ಲ ಕಡೆಗಳಲ್ಲೂ ವೈದ್ಯರನ್ನ ತುಂಬಿಕೊಡ್ತೇವೆ. ಮುಂದಿನ ತಿಂಗಳಿನಿಂದಲೇ ಈ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಸ್ಪಷ್ಟಪಡಿಸಿದರು.
ಈಗ ನರ್ಸ್, ಮತ್ತು ಗ್ರೂಪ್ ಡಿ ಹುದ್ದೆಗಳ ಕೊರತೆಯಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತನಾಡುವುದಾಗಿ ತಿಳಿಸಿದರು.
ಸ್ಪಚ್ಚ ಆಸ್ಪತ್ರೆ: “ಸ್ವಚ್ಚ ಆಸ್ಪತ್ರೆ ನಮ್ಮ ಆದ್ಯತೆ” ಧೇಯ ವಾಕ್ಯದೊಂದಿಗೆ ರಾಜ್ಯದಲ್ಲಿರುವ ಎಲ್ಲಾ ಹಂತದ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸ್ವಚ್ಚತಾ ಚಟುವಟಿಕೆಗಳನ್ನು ಕೈಗೊಳ್ಳುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಅಭಿಯಾನದಡಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುವುದು ಆಸ್ಪತ್ರೆಗಳಲ್ಲಿ ಅನುಪಯುಕ್ತ ಸಾಮಾಗ್ರಿಗಳು, ಪರಿಕರಗಳನ್ನ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಯೋಜನೆ ರೂಪಿಸಲಾಗಿದೆ.
ಆಸ್ಪತ್ರೆಯ ಆವರಣದಲ್ಲಿರುವ ಅನುಪಯುಕ್ತ ಗಿಡಗಂಟಿಗಳನ್ನು ಸ್ವಚ್ಛಗೊಳಿಸುವುದು, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಕಲ್ಪಿಸಲಾಗುವುದು. ವಿಶೇಷವಾಗಿ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳ ಆವರಣದಲ್ಲಿ ಹರ್ಬಲ್ ಸಸಿಗಳನ್ನ ಬೆಳೆಸಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ರಾಮನಗರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಔಷಧಿ ಗಿಡಗಳನ್ನ ಇದೇ ವೇಳೆ ನೆಡಲಾಯಿತು.




