ಬೆಂಗಳೂರು: ನಗರ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಮತ್ತು ಇನ್ನಿತರ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಮತ್ತು ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡ್ರೋನ್ ಬಳಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಾವು ಮಂಡಿಸಿದ 15ನೇ ಬಜೆಟ್ ನಲ್ಲಿ, ಅತ್ಯಾಧುನಿಕವಾದ ಈ ತಂತ್ರಜ್ಞಾನ ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನ ಮಾಡಲು ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ತೆರಿಗೆ ವಸೂಲಿಗೆ ಸ್ವಸಹಾಯ ಗುಂಪುಗಳ ಸೇವೆ ಪಡೆಯುವುದು, ನೇರಪಾವತಿ ಯೋಜನೆಯಡಿ ಖಾಯಂ ಮಾಡಿರುವ 24 ಸಾವಿರ ಪೌರ ಕಾರ್ಮಿಕರ ಜೊತೆಗೆ ಉಳಿದವರನ್ನು ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಯೋಜಿತ ನಗರೀಕರಣದ ಉದ್ದೇಶದಿಂದ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಸ್ಥಳೀಯ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲಾಗುವುದು. ಎಲ್ಲಾ ಸ್ಥಳೀಯ ಸಂಸ್ಥೆಗಳ ಕಾರ್ಯ ಕಲಾಪಗಳನ್ನು ನೇರ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಮೈಸೂರಿನ ಪ್ರಖ್ಯಾತ ಲ್ಯಾನ್ಸ್ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ದಿಪಡಿಸಲಾಗುತ್ತಿದೆ ಎಂದರು.




