ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಸಂಕಷ್ಟ ಎದುರಾಗಿದೆ.
ಈ ಯೋಜನೆ ಜಾರಿಯಿಂದ ರಸ್ತೆ ಸಾರಿಗೆ ಪ್ರಯಾಣದಲ್ಲಿ ಸಾಕಷ್ಟು ಅವ್ಯವಸ್ಥೆಯಾಗಿದೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಕೆಯಾಗಿದೆ.
ಶಕ್ತಿ ಯೋಜನೆಯಿಂದಾಗಿ ಸಾರಿಗೆ ಬಸ್ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ ಸೀಟಿಗಾಗಿ ಹೊಡೆದಾಟ ನಡೆಯುತ್ತಿದೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲು ಸಾಧ್ಯವಾಗುತ್ತಿಲ್ಲ. ಕೆಲವೆಡೆ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ಬಿದ್ದ ಘಟನೆಗಳು ಜರುಗಿವೆ. ಜತೆಗೆ ವಿದ್ಯಾರ್ಥಿಗಳು ಶಾಲಾ ಕಾಲೇಜು ಪರೀಕ್ಷೆಗಳಿಗೆ ಸರಿಯಾದ ವೇಳೆಗೆ ಹೋಗಲಾಗುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಶಕ್ತಿ ಯೋಜನೆಗೆ ಒಂದೇ ವಾರದಲ್ಲಿ ತೆರಿಗೆದಾರರ 100 ಕೋಟಿ ಹಣ ಯೋಜನೆಗೆ ಬಳಕೆಯಾಗಿದ್ದು, ವರ್ಷಕ್ಕೆ 3200 ರಿಂದ 3400 ಕೋಟಿ ರೂಪಾಯಿ ನಷ್ಟವಾಗಲಿದೆ. ಟಿಕೆಟ್ ಖರೀದಿಸಿದವರಿಗೆ ಶೇ.50ರಷ್ಟು ಸೀಟ್ ಮೀಸಲಿಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸಲು ಅವಕಾಶ ನೀಡಬಾರದು. ಮಕ್ಕಳು, ವೃದ್ಧರ ಬಸ್ ಪ್ರವೇಶಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಪಿಐಎಲ್ ಮೂಲಕ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.




