ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು: ನಿರ್ಮಲಾನಂದ ಶ್ರೀ

5 months ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಹೈಕಮಾಂಡ್ ಮಾಡಿದ ಅಧಿಕಾರ ಹಂಚಿಕೆಯ ಸೂತ್ರದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ  ಶ್ರೀಗಳು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ.

ತಮ್ಮ ಆಪ್ತ ರೊಂದಿಗೆ ದೆಹಲಿಗೆ ಆಗಮಿಸಿರುವ ನಿರ್ಮಲಾನಂದ ಶ್ರೀಗಳು ಖಾಸಗಿ ಸ್ಥಳದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕೆಲವು ಪ್ರಮುಖ ನಾಯಕರನ್ನು ಭೇಟಿ ಮಾಡಿ ತಮ್ಮ ಸಮುದಾಯದ ಬೇಡಿಕೆಯ ಬಗ್ಗೆ ಗಮನ ಸೆಳೆದಿದ್ದಾರೆ.

ಈ ಸಮಯದಲ್ಲಿ ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮಾಜಿ ಸಂಸದ ಡಿ ಕೆ ಸುರೇಶ್ ಹಲವು ಮುಖಂಡರು ಉಪಸ್ಥಿತರಿದ್ದರು ಎಂದು ಗೊತ್ತಾಗಿದೆ.

ಈ ನಡುವೆ ಬೆಂಗಳೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕುಂಚಟಿಗ ಸ್ಪಟಿಕಪುರಿ ಮಠಾಧೀಶ ನಂಜಾವಧೂತ ಶ್ರೀಗಳು ಸುದೀರ್ಘಸಮಾಲೋಚನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಒಕ್ಕಲಿಗ ಸಮುದಾಯ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದೆ. ಆದರೆ ಹಿರಿಯರಾದ ಸಿದ್ದರಾಮಯ್ಯ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿತು. ಅದನ್ನು ನಮ್ಮ ಸಮುದಾಯ ಒಪ್ಪಿಕೊಂಡಿದೆ. ಈಗ ಎರಡೂವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಂಡಿದ್ದು ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದರು.

ಕಾಂಗ್ರೆಸ್ ಪಕ್ಷ ಅತ್ಯಂತ ಸಂಕಷ್ಟ ಸಮಯದಲ್ಲಿ ಇದ್ದಾಗ ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಪಕ್ಷದ ಹಿತ ಕಾಯುವ ಕೆಲಸ ಮಾಡಿದ್ದಕ್ಕಾಗಿ ಜೈಲಿಗೆ ಕೂಡ ಹೋಗಿ ಬಂದರು. ಇಂಥವರಿಗೆ ಈಗ ಅಧಿಕಾರ ನೀಡದೆ ಸಬೂಬು ಹೇಳುವುದು ಸರಿಯಲ್ಲ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೇಬೇಕು ಎನ್ನುವುದು ಸಾಮಾಜಿಕ ನ್ಯಾಯ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಎತ್ತಿ ಹಿಡಿಯಲಿದೆ ಎಂದರು.

Leave a Reply