ಬಿಜೆಪಿಯವರಿಗೆ ತಮ್ಮ ಮನೆ ಹುಳುಕು, ದೋಸೆ ತೂತು ಕಾಣುತ್ತಿಲ್ಲ: ಡಿ.ಕೆ.ಶಿವಕುಮಾರ್‌

3 years ago

#DKsivakumar #attack #bjp

ಬಿಜೆಪಿ 2023 ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ 7,361 ರೌಡಿಶೀಟರ್‌ಗಳನ್ನು ರೌಡಿ ಪಟ್ಟಿಯಿಂದ ಕೈ ಬಿಟ್ಟಿದೆ

ಬೆಂಗಳೂರು: ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ತಮ್ಮ ಮನೆ ಹುಳುಕು, ದೋಸೆ ತೂತು ಕಾಣುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ..ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣವೊಂದನ್ನು ಹಿಂಪಡೆಯುವಂತೆ ಶಿವಕುಮಾರ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವ ವಿಷಯವಾಗಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಅವರು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಅವರ ಅಧಿಕಾರಾವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ ಎಂದು ತಿಳಿದುಕೊಂಡಿದ್ದಾರೆ. ಜನ ಅವರನ್ನು ಎಲ್ಲಿ ಕೂರಿಸಬೇಕೊ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ, ಅರಗ ಜ್ಞಾನೇಂದ್ರ, ಮಾಧುಸ್ವಾಮಿ ಅವರು ಸೇರಿದಂತೆ ಅನೇಕರು ಮನವಿ ಮಾಡಿದ್ದರು. 2023 ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ 7,361 ರೌಡಿಶೀಟರ್‌ಗಳನ್ನು ರೌಡಿ ಪಟ್ಟಿಯಿಂದ ಕೈ ಬಿಟ್ಟಿದೆ. ಇಂತಹವರು ಈಗ ನಮಗೆ ಬುದ್ಧಿ ಹೇಳಲು ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯಾರ್ಯಾರು ಪ್ರಕರಣ ಹಿಂಪಡೆಯಲು ಪತ್ರ ಬರೆದಿದ್ದರು, ಸಹಿ ಹಾಕಿದ್ದರು ಆ ಪತ್ರಗಳನ್ನೆಲ್ಲಾ ಮುಂದಿಡಲೇ? ನಾನು ಹೆಸರಿಸಿದವರು ಗಲಭೆ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸ್ಸು ಮಾಡಿಲ್ಲ ಎಂದು ಹೇಳಲಿ. ಅವರೇ ಬರೆದಿರುವ ಪತ್ರಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಸವಾಲು ಹಾಕಿದರು.

ಬಿಜೆಪಿಯವರು ಅವರ ಕಾರ್ಯಕರ್ತರ ಪರವಾಗಿ ರಾಜಕಾರಣ ಮಾಡಿದ್ದಾರೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಅಮಾಯಕರ ಮೇಲೆ ಇರುವ ಪ್ರಕರಣಗಳನ್ನು ಮಾತ್ರ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಮಾಡಲು ಅವಕಾಶವಿದ್ದರೇ ಮಾಡಬಹುದು ಎಂದು ಅಧಿಕಾರಿಗಳು ಶಿಫಾರಸ್ಸು ಮಾಡುತ್ತಾರೆ. ಇದಕ್ಕೆಂದೇ ಸಮಿತಿ ಇದೆ. ಅವರು ವರದಿ ನೀಡಿದ ಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

Leave a Reply